ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭಾ ಉಪಚುನಾವಣೆಗಳಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಮತ್ತು ಸತ್ಯಕ್ಕೆ ಜಯ ಸಿಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, ‘ನಾನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರನ್ನು ಭೇಟಿ ಮಾಡಿದ್ದೇನೆ. ಅವರ ಒಗ್ಗಟ್ಟು, ಕಠಿಣ ಪರಿಶ್ರಮ, ಚುನಾವಣೆಯಲ್ಲಿ ಪ್ರಬಲವಾಗಿ ಸ್ಪರ್ಧಿಸುವ ಅವರ ಧೈರ್ಯ ಮತ್ತು ಜನರಿಗೆ ಸೇವೆ ಸಲ್ಲಿಸಲು ಅವರಲ್ಲಿರುವ ಸಮರ್ಪಣೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ.
‘ಸಾರ್ವಜನಿಕರು ನಮ್ಮನ್ನು ಬೆಂಬಲಿಸುತ್ತಾರೆ ಮತ್ತು ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಒಂದೆಡೆ ಬಿಜೆಪಿ ಹಣ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಲು ಹಂಬಲಿಸುತ್ತಿದೆ. ಪ್ರಜಾಪ್ರಭುತ್ವವನ್ನು ನಾಶ ಮಾಡುವ ರಾಜಕಾರಣವನ್ನು ನಡೆಸುತ್ತಿದೆ. ಮತ್ತೊಂದೆಡೆ ಸತ್ಯ, ಧೈರ್ಯ ಮತ್ತು ತಾಳ್ಮೆಯಿಂದ ಜನರಿಗಾಗಿ ಅವಿರತವಾಗಿ ದುಡಿಯುತ್ತಿರುವ ಕಾಂಗ್ರೆಸ್ನ ಸಂಕಲ್ಪವಿದೆ ಎಂದು ಅವರು ಪ್ರತಿಪಾದಿಸಿದರು.
ಹಿಮಾಚಲ ಪ್ರದೇಶದಲ್ಲಿ ಜೂನ್ 1ರಂದು ಲೋಕಸಭೆ ಚುನಾವಣೆಯೊಂದಿಗೆ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.