ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಅಕ್ಟೋಬರ್ 2ರಿಂದ 31ರವರೆಗೆ ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ.ಮೀ. ಪಾದಯಾತ್ರೆ ನಡೆಸುವ ಹೊಸ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಸಚಿವ ಪ್ರಹ್ಲಾದ ಜೋಶಿ,ಪಾದಯಾತ್ರೆಗಾಗಿ ಪ್ರತಿ ಲೋಕಸಭಾ ಕ್ಷೇತ್ರದಲ್ಲಿಯೂ 15–20 ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ಪ್ರತಿದಿನ 15 ಕಿ.ಮೀ. ಪಾದಯಾತ್ರೆ ನಡೆಸುತ್ತವೆ. ಸಂಸದರು ಮಹಾತ್ಮಾ ಗಾಂಧಿ ಅವರ ಜೀವನ ಸಾಧನೆ, ಸ್ವಾತಂತ್ರ್ಯ ಹೋರಾಟ, ಸಸಿ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಈ ಕಾರ್ಯಕ್ರಮಕ್ಕಾಗಿ ಪಕ್ಷದ ವತಿಯಿಂದಲೂ ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ತಮ್ಮ ತಪ್ಪಿಗೆ ಮತ್ತೊಬ್ಬರನ್ನು ದೂರುವುದು ಕಾಂಗ್ರೆಸ್ನ ಜಾಯಮಾನವಾಗಿದೆ. ಅವರ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ರಾಜ್ಯಪಾಲರಿಗೆ ಮಾಹಿತಿಯನ್ನೂ ನೀಡಿದ್ದಾರೆ. ನಾವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ ಜರುಗಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.