ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತ ಬಾಲಕಿಯ ತಂದೆಯು ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ ಒಂದು ದಿನದ ಬಳಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದಿದೆ.
13 ವರ್ಷದ ಬಾಲಕಿಯ ಮೇಲೆ ಇಬ್ಬರು ಯುವಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಇದರಲ್ಲಿ ಒಬ್ಬ ಯುವಕ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮಗ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆಯು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಮನೆಯಲ್ಲಿದ್ದ 13 ವರ್ಷದ ಬಾಲಕಿಯನ್ನು ದೀಪ್ ಯಾದವ್ ಮತ್ತು ಗೋಲು ಯಾದವ್ ಎಂಬುವರು ಅಪಹರಿಸಿ, ಏಕಾಂತ ಸ್ಥಳವೊಂದಕ್ಕೆ ಕರೆದೊಯ್ದು ಸೋಮವಾರ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಆರೋಪಿಗಳ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿತ್ತು. ಆರೋಪಿ ದೀಪ್ ಯಾದವ್ ಕನೌಜ್ ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮಗ ಎನ್ನಲಾಗಿದೆ.
‘ಆರೋಪಿಗಳನ್ನು ಬಂಧಿಸಲು ಪೊಲೀಸರು ಹಲವು ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಸಂತ್ರಸ್ತೆಯ ತಂದೆಯೂ ಪೊಲೀಸರ ಜೊತೆಗಿದ್ದರು. ಬುಧವಾರ ಬೆಳಿಗ್ಗೆ ಅನ್ಪುರ್ ಕ್ರಾಸಿಂಗ್ ಬಳಿಯ ಪೊಲೀಸರೊಬ್ಬರು ಸಂತ್ರಸ್ತೆಯ ತಂದೆಯನ್ನು ವೇಗವಾಗಿ ಬರುತ್ತಿದ್ದ ಟ್ರಕ್ನತ್ತ ದೂಡಿದರು. ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಅಷ್ಟೊತ್ತಿಗೆ ಮೃತಪಟ್ಟರು’ ಎಂದು ಸಂತ್ರಸ್ತೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
‘ನನ್ನ ತಂದೆಯನ್ನು ಕೊಲೆ ಮಾಡುವುದಾಗಿ ದೀಪ್ ಯಾದವ್ ಬೆದರಿಕೆ ಒಡ್ಡಿದ್ದ’ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾರೆ.
ಅತ್ಯಾಚಾರ ಮತ್ತು ಅಪಘಾತ ಪ್ರಕರಣವನ್ನು ಖಂಡಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು. ಟ್ರಕ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.