ಕೋಲ್ಕತ್ತ: ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಅಭಿವೃದ್ಧಿ ಸಾಧಿಸಿರುವ ಬಗ್ಗೆ ಅಮಿತ್ ಶಾ ನೀಡಿರುವ ಅಂಕಿ–ಅಂಶಗಳು ಸುಳ್ಳಿನ ಕಂತೆ ಎಂದು ಮಮತಾ ದೂರಿದ್ದಾರೆ.
ಬೋಲ್ಪುರದಲ್ಲಿ ಭಾನುವಾರ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಅಮಿತ್ ಶಾ, ತೃಣಮೂಲ ಕಾಂಗ್ರೆಸ್ ಸರ್ಕಾರಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಭ್ರಷ್ಟಾಚಾರ ಮತ್ತು ಸುಲಿಗೆ ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದರು.
ಇದನ್ನೂ ಓದಿ:ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ: ಅಮಿತ್ ಶಾ
ಇದಕ್ಕೆ ತಿರುಗೇಟು ನೀಡಿರುವ ಮಮತಾ, ‘ಅಮಿತ್ ಶಾ ಅವರೇ ನೀವು ಗೃಹ ಸಚಿವರು. ನಿಮ್ಮ ಪಕ್ಷದ ಕಾರ್ಯಕರ್ತರು ನೀಡಿರುವ ಸುಳ್ಳುಗಳನ್ನು ಪರಿಶೀಲಿಸದೆಯೇ ಜನರ ಮುಂದೆ ಹೇಳುವುದು ನಿಮಗೆ ಶೋಭೆಯಲ್ಲ’ ಎಂದು ಹೇಳಿದ್ದಾರೆ.
‘ಕೈಗಾರಿಕೆಗಳ ವಿಚಾರದಲ್ಲಿ ನಾವು ಶೂನ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಹೌದು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮದಲ್ಲಿ (ಎಂಎಸ್ಎಂಇ) ನಾವು ಮೊದಲ ಸ್ಥಾನದಲ್ಲಿದ್ದೇವೆ’ ಎಂದು ಮಮತಾ ತಿರುಗೇಟು ನೀಡಿದ್ದಾರೆ..
‘ಗ್ರಾಮಗಳಲ್ಲಿ ರಸ್ತೆ ನಿರ್ಮಿಸಿಲ್ಲ ಎಂದೂ ಅಮಿತ್ ಶಾ ಟೀಕಿಸಿದ್ದಾರೆ. ಗ್ರಾಮೀಣ ರಸ್ತೆ ನಿರ್ಮಾಣ ವಿಚಾರದಲ್ಲಿಯೂ ನಾವು ಮೊದಲ ಸ್ಥಾನದಲ್ಲಿದ್ದೇವೆ. ಇದು ಕೇಂದ್ರ ಸರ್ಕಾರವೇ ಹಂಚಿಕೊಂಡಿರುವ ಮಾಹಿತಿ’ ಎಂದು ಹೇಳಿದ್ದಾರೆ.
ರಾಜೀನಾಮೆ ಅಂಗೀಕಾರ: ಟಿಎಂಸಿ ಶಾಸಕ ಸುವೇಂದು ಅಧಿಕಾರಿ ರಾಜೀನಾಮೆಯನ್ನು ಸ್ವೀಕರಿಸಲಾಗಿದೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮಾನ್ ಬ್ಯಾನರ್ಜಿ ತಿಳಿಸಿದ್ದಾರೆ.
ಸುವೇಂದು ಅಧಿಕಾರಿ ಅವರು ಶನಿವಾರ ಟಿಎಂಸಿ ತೊರೆದು ಬಿಜೆಪಿ ಸೇರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.