
ಗೌರಿ ಲಂಕೇಶ್
ಜಾಲ್ನಾ (ಮಹಾರಾಷ್ಟ್ರ): ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶ್ರೀಕಾಂತ್ ಪಾಂಗಾರ್ಕರ್ ಅವರು ಮಹಾರಾಷ್ಟ್ರದ ಜಾಲ್ನಾ ಮಹಾನಗರ ಪಾಲಿಕೆಗೆ ಜನವರಿ 15ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಶ್ರೀಕಾಂತ್ ಅವರು 13ನೇ ವಾರ್ಡ್ನಿಂದ ಕಣಕ್ಕಿಳಿದಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಇತರ ಹಲವು ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
2024ರ ವಿಧಾನಸಭಾ ಚುನಾವಣೆಗೂ ಮುನ್ನ, ಶ್ರೀಕಾಂತ್ ಶಿವಸೇನಾಗೆ ಸೇರ್ಪಡೆಗೊಂಡಿದ್ದರು. ಆದರೆ ತೀವ್ರ ಟೀಕೆ ಎದುರಾದ ಕಾರಣ ಅವರನ್ನು ಪಕ್ಷಕ್ಕೆ ಸೇರಿಸುವ ನಿರ್ಧಾರವನ್ನು ಶಿಂದೆ ಅವರು ತಡೆಹಿಡಿದಿದ್ದರು.
ಜಾಲ್ನಾ ನಗರಸಭೆ ಆಗಿದ್ದ ಸಂದರ್ಭದಲ್ಲಿ ಶ್ರೀಕಾಂತ್ ಅವರು 2001ರಿಂದ 2006ರ ಸದಸ್ಯರಾಗಿದ್ದರು. ಅವರು ಅವಿಭಜಿತ ಶಿವಸೇನಾದಿಂದ ಸ್ಪರ್ಧಿಸಿದ್ದರು. 2011ರಲ್ಲಿ ಶಿವಸೇನಾ ಟಿಕೆಟ್ ನೀಡದಿದ್ದಾಗ ಹಿಂದು ಜನಜಾಗೃತಿ ಸಮಿತಿ ಸೇರಿದ್ದರು. ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಅವರಿಗೆ ಕರ್ನಾಟಕ ಹೈಕೋರ್ಟ್ 2024ರ ಸೆಪ್ಟೆಂಬರ್ನಲ್ಲಿ ಜಾಮೀನು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.