ADVERTISEMENT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಿಂದಿನ ಆದೇಶ ಪರಿಗಣಿಸದಿರಲು ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 21:36 IST
Last Updated 3 ಜುಲೈ 2021, 21:36 IST
   

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿ ದಾಖಲಾಗಿದ್ದ ಆರೋಪಗಳನ್ನು ರದ್ದುಗೊಳಿಸಿ ಹೊರಡಿಸಲಾದ ಆದೇಶ ಪರಿಗಣಿಸದೇ ಜಾಮೀನು ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಹೈಕೋರ್ಟ್‌ಗೆ ಸೂಚಿಸಿದೆ.

ಆರೋಪಿ ಮೋಹನ್‌ ನಾಯಕ್‌ ವಿರುದ್ಧ ದಾಖಲಾಗಿದ್ದ ಆರೋಪಗಳನ್ನು ರದ್ದುಪಡಿಸಿ ರಾಜ್ಯ ಹೈಕೋರ್ಟ್‌ ಏಪ್ರಿಲ್‌ 22ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಗೌರಿ ಅವರ ಸೋದರಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್‌ ನೇತೃತ್ವದ ಪೀಠ ಈ ಸೂಚನೆ ನೀಡಿದೆ.

ಪ್ರಕರಣ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಜೂನ್‌ 29ರಂದು ಕರ್ನಾಟಕ ಸರ್ಕಾರ ಹಾಗೂ ಆರೋಪಿಗೆ ನ್ಯಾಯ ಪೀಠ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಆರೋಪ ರದ್ದುಪಡಿಸಿದ ನಂತರ ಆರೋಪಿಯು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ಗೆ ಪೂರ್ಣಗೊಳಿಸಿದೆ. ಆದೇಶ ಪ್ರಕಟಿಸುವಾಗ ಹಿಂದಿನ ಆರೋಪ ಪರಿಗಣಿಸದಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಿರುವ ಪೀಠವು, ಪ್ರಕರಣದ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.