ADVERTISEMENT

ಸೆ.30ರೊಳಗೆ ಎಸ್‌ಐಆರ್‌ಗೆ ಸಜ್ಜಾಗಿ: ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಇ.ಸಿ ಸೂಚನೆ

ಪಿಟಿಐ
Published 21 ಸೆಪ್ಟೆಂಬರ್ 2025, 10:06 IST
Last Updated 21 ಸೆಪ್ಟೆಂಬರ್ 2025, 10:06 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಪ್ಟೆಂಬರ್‌ 30ರೊಳಗೆ ಸಜ್ಜಾಗುವಂತೆ ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ಈ ಮೂಲಕ ಅಕ್ಟೋಬರ್‌–ನವೆಂಬರ್‌ ವೇಳೆಗೆ ದೇಶದಾದ್ಯಂತ ಎಸ್ಐಆರ್‌ ನಡೆಸುವ ಸೂಚನೆ ನೀಡಿದೆ.

ಎಸ್‌ಐಆರ್‌ ಕುರಿತು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಆಯೋಗದ ಹಿರಿಯ ಅಧಿಕಾರಿಗಳು ಈಚೆಗೆ ಮಹತ್ವದ ಸಭೆ ನಡೆಸಿದ್ದರು. ಎಸ್‌ಐಆರ್‌ ಪ್ರಕ್ರಿಯೆಗೆ ಸಜ್ಜಾಗಲು ಸೆಪ್ಟೆಂಬರ್‌ 30ರ ಗಡುವು ನಿಗದಿಪಡಿಸಲಾಗಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ತಮ್ಮ ರಾಜ್ಯಗಳಲ್ಲಿ ಕೊನೆಯದಾಗಿ ಎಸ್ಐಆರ್‌ ಪ್ರಕ್ರಿಯೆ ನಡೆದ ಬಳಿಕ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯನ್ನು ಸಿದ್ಧವಾಗಿಡುವಂತೆ ಇ.ಸಿ, ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ADVERTISEMENT

ಹಳೆಯ ಮತದಾರರ ಪಟ್ಟಿಗಳ ಬಳಕೆ:

ಕೊನೆಯ ಬಾರಿ ಪರಿಷ್ಕರಣೆ ಆಗಿರುವ ಮತದಾರರ ಪಟ್ಟಿಯನ್ನು ಅನೇಕ ರಾಜ್ಯಗಳು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿವೆ. ಹೆಚ್ಚಿನ ರಾಜ್ಯಗಳು 2002–2004ರ ಅವಧಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ್ದವು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2008ರಲ್ಲಿ ಕೊನೆಯ ಬಾರಿಗೆ ‘ಎಸ್‌ಐಆರ್‌’ ನಡೆದಿತ್ತು. ಅದೇ ಮತದಾರರ(2008ರ) ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದೆ.

ಉತ್ತರಾಖಂಡದಲ್ಲಿ ಕೊನೆಯ ಬಾರಿಗೆ 2006ರಲ್ಲಿ ‘ಎಸ್‌ಐಆರ್‌ ನಡೆದಿದ್ದು, ಆ ವರ್ಷದ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.

ಇನ್ನು ಬಿಹಾರದ 2003ರ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಣೆಗಾಗಿ ಬಳಸುತ್ತಿದೆ. ಕರ್ನಾಟಕದಲ್ಲಿ 2002ರಲ್ಲಿ ಎಸ್‌ಐಆರ್ ನಡೆದಿತ್ತು. 23 ವರ್ಷಗಳ ನಂತರ ಮತ್ತೆ ಎಸ್‌ಐಆರ್‌ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 2002ರ ಮತದಾರರ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಬಿಹಾರದ ನಂತರ ದೇಶದ ಉಳಿದ ರಾಜ್ಯಗಳಲ್ಲೂ ‘ಎಸ್‌ಐಆರ್‌’ ಜಾರಿಗೊಳಿಸುವುದಾಗಿ ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಮುನ್ನ ಅಂದರೆ, ಈ ವರ್ಷಾಂತ್ಯದಿಂದಲೇ ಈ ರಾಜ್ಯಗಳಲ್ಲಿ ‘ಎಸ್‌ಐಆರ್‌’ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ.

‘ಎಸ್‌ಐಆರ್‌’ ಉದ್ದೇಶ

  • ಜನ್ಮಸ್ಥಳ ಪರಿಶೀಲನೆಯ ಮೂಲಕ ವಿದೇಶಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದು

  • ಬಾಂಗ್ಲಾದೇಶ, ಮ್ಯಾನ್ಮಾರ್‌ ಸೇರಿ ದೇಶದಲ್ಲಿ ನುಸುಳಿರುವ ವಿದೇಶಿ ಅಕ್ರಮ ವಲಸಿಗರನ್ನು ಗುರುತಿಸುವುದು

  • ಮತದಾರರ ಪಟ್ಟಿಯ ಸಮಗ್ರತೆ ರಕ್ಷಿಸಲು, ಸಾಂವಿಧಾನಿಕ ಆದೇಶ ನಿರ್ವಹಿಸಲು ಮುಂದಾದ ಆಯೋಗ

  • ಮತಗಟ್ಟೆ ಅಧಿಕಾರಿಗಳು ಬೂತ್‌ ಮಟ್ಟದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ವಿವರವನ್ನು ಸಂಗ್ರಹಿಸಿ, ಖಚಿತಪಡಿಸಿಕೊಳ್ಳುವುದು.

ಆಧಾರ್‌ಗೆ ಚಿಪ್‌ ಅಳವಡಿಸಿ

ಲಖನೌ: ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದುವುದನ್ನು ತಪ್ಪಿಸಲು ಆಧಾರ್‌ ಕಾರ್ಡ್‌ಗಳಿಗೆ ಚಿಪ್‌ ಅಳವಡಿಸುವ ವ್ಯವಸ್ಥೆ ಜಾರಿಯಾಗಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

ಔರೈಯಾ ಜಿಲ್ಲೆಯ ಪಕ್ಷದ ಮುಖಂಡರ ಜತೆ ಚುನಾವಣಾ ಸಿದ್ಧತೆಗಳ ಕುರಿತು ಅವರು ಭಾನುವಾರ ಚರ್ಚೆ ನಡೆಸಿದರು. ‘ನಕಲಿ ಆಧಾರ್‌ ಕಾರ್ಡ್‌ ಬಳಸಿ ಚುನಾವಣೆಯಲ್ಲಿ ಮತ ಹಾಕುವುದನ್ನು ತಪ್ಪಿಸಲು ಆಧಾರ್‌ ಕಾರ್ಡ್‌ಗಳಿಗೆ ಚಿಪ್‌ ಅಳವಡಿಸಬೇಕು’ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.