ಪಣಜಿ: ಗೋವಾ ಮುಖ್ಯಮಂತ್ರಿಯ ಸ್ಥಾನದಿಂದ ಮನೋಹರ್ ಪರ್ರೀಕರ್ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿಯ ಮಿತ್ರಪಕ್ಷ ಗೋವಾ ಫಾರ್ವರ್ಡ್ ಮುಖ್ಯಸ್ಥ ವಿಜಯ್ ಸರ್ದೇಸಾಯಿ ಗುರುವಾರ ಸ್ಪಷ್ಟಪಡಿಸಿದ್ದಾರೆ.
ಪರ್ರೀಕರ್ ಸಂಪುಟದಲ್ಲಿ ಕೃಷಿ ಸಚಿವರಾಗಿರುವ ಸರ್ದೇಸಾಯಿ, ‘ಇದೇ 28ರಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪದಲ್ಲಿ ಪರ್ರೀಕರ್ ಅವರನ್ನು ಭೇಟಿ ಮಾಡಿದ್ದೇನೆ. ಅವರು ಆರೋಗ್ಯವಾಗಿದ್ದಾರೆ. ಹೀಗಿದ್ದ ಮೇಲೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆ ಹೇಗೆ ಉದ್ಭವಿಸುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.
ಮೇದೋಜೀರಕ ಗ್ರಂಥಿ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಅಕ್ಟೋಬರ್ 14ರಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಅವರು ಮನೆಗೆ ಮರಳಿದ ನಂತರ ವೈದ್ಯರ ತಂಡ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದೆ.
ಪರ್ರೀಕರ್ ಅವರ ಅನಾರೋಗ್ಯ ಸಂಬಂಧಿತ ಅನುಪಸ್ಥಿತಿಯು ರಾಜ್ಯದಲ್ಲಿ ಆಡಳಿತಯಂತ್ರವನ್ನು ಸ್ಥಗಿತಗೊಳಿಸಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಆದರೆ, ಆಡಳಿತರೂಢ ಬಿಜೆಪಿಯು ಪರ್ರೀಕರ್ ಅವರು ಚಿಕಿತ್ಸೆಗೆ ಒಳಗಾಗಿದ್ದರೂ ಆಡಳಿತ ವ್ಯವಹಾರವನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಸಮರ್ಥಿಸಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.