ಕೊಚ್ಚಿ: ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡಲು ನೆರವಾದ ಆರೋಪದಡಿ ಅಮಾನತುಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರು ಶುಕ್ರವಾರ ಕಸ್ಟಮ್ಸ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಈಗಾಗಲೇ ಎರಡು ಬಾರಿ ಶಿವಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ಜುಲೈ 5ರಂದು ಗಲ್ಫ್ನಿಂದ ಬಂದ ಏರ್ ಕಾರ್ಗೊ ಬ್ಯಾಗ್ವೊಂದರಲ್ಲಿ ₹15 ಕೋಟಿ ಮೌಲ್ಯದ 30 ಕೆ.ಜಿ.ಚಿನ್ನ ಪತ್ತೆಯಾಗಿತ್ತು. ಇದನ್ನುತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್, ಎನ್ಐಎ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪ್ರತ್ಯೇಕ ತನಿಖೆ ನಡೆಸುತ್ತಿವೆ.
‘ರಾಷ್ಟ್ರೀಕೃತ ಬ್ಯಾಂಕ್ವೊಂದರಲ್ಲಿ ಲಾಕರ್ ತೆರೆಯಲು ಸ್ವಪ್ನಾಗೆ ಶಿವಶಂಕರ್ ಸಹಾಯ ಮಾಡಿರುವ ಅನುಮಾನವಿದೆ. ಚಿನ್ನ ಕಳ್ಳ ಸಾಗಣೆಯಿಂದ ಬಂದ ಹಣವನ್ನು ಸ್ನಪ್ನಾ ಇದೇ ಲಾಕರ್ನಲ್ಲಿ ಇಡುತ್ತಿದ್ದರು ಎಂಬುದು ಗೊತ್ತಾಗಿದೆ. ಈ ವಿಚಾರವಾಗಿ ಶಿವಶಂಕರ್ ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಇ.ಡಿ. ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮಧ್ಯಂತರ ಚಾರ್ಜ್ಶೀಟ್ನಲ್ಲಿ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.