ADVERTISEMENT

ಮುಂದಿನ ವಾರ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪಿಟಿಐ
Published 5 ಜೂನ್ 2020, 20:55 IST
Last Updated 5 ಜೂನ್ 2020, 20:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಕಾರಣ ಮುಂದಿನ ವಾರ ದೇಶದ ದಕ್ಷಿಣ ಹಾಗೂ ಪಶ್ಚಿಮ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ನೈರುತ್ಯ ಮುಂಗಾರು ಚುರುಕುಗೊಳ್ಳಲಿದ್ದು, ಇದರಿಂದಾಗಿ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ತಮಿಳುನಾಡು, ಪುದುಚೆರಿ, ಕಾರೈಕಲ್‌ಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದೂ ಇಲಾಖೆ ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುವ ಕಡಿಮೆ ಒತ್ತಡ ಪ್ರದೇಶ ಮುಂದಿನ ವಾರ ಒಡಿಶಾದತ್ತ ಚಲಿಸಲಿದೆ. ಇದು ಸಹ ಮುಂಗಾರು ಚುರುಕಾಗಲು ನೆರವಾಗಲಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.

ADVERTISEMENT

ಈ ಬಾರಿ ಮುಂಗಾರು ಕೇರಳ ಕರಾವಳಿಯನ್ನು ವಾಡಿಕೆಗಿಂತ ನಾಲ್ಕು ದಿನ ತಡವಾಗಿ ಪ್ರವೇಶಿಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿತ್ತು. ಆದರೆ, ‘ನಿಸರ್ಗ‘ ಚಂಡಮಾರುತದ ಪರಿಣಾಮ ಜೂನ್‌ 1ರಂದೇ ಮುಂಗಾರಿನ ಸಿಂಚನವಾಯಿತು.

ಜೂನ್‌ 1ರಿಂದ ಈ ವರೆಗೆ ದೇಶದಲ್ಲಿ ವಾಡಿಕೆಗಿಂತ ಶೇ 9ರಷ್ಟು ಅಧಿಕ ಮಳೆ ಬಿದ್ದಿದೆ ಎಂದೂ ಐಎಂಡಿ ಹೇಳಿದೆ.

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು:
ರಾಜ್ಯದ ಕರಾವಳಿ ಭಾಗದಲ್ಲಿ ಜೂ.6ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶನಿವಾರ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲದಲ್ಲಿ ಶುಕ್ರವಾರ 7 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಲ್ಲೂರು, ಕಾರವಾರ, ಹೊನ್ನಾವರ, ಕುಂದಾಪುರ 4, ಗೋಕರ್ಣ ಹಾಗೂ ಆಗುಂಬೆಯಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ. ಕಲಬುರ್ಗಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.