ನವದೆಹಲಿ: ‘ಮೇಘ ಸ್ಫೋಟ, ಭಾರಿ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಕಿಶ್ತವಾರ್ ಮತ್ತು ಕಾರ್ಗಿಲ್ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ನೆರೆ ಪೀಡಿತ ಪ್ರದೇಶಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ‘ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
‘ಸರ್ಕಾರ ಎಲ್ಲ ರೀತಿಯ ನೆರವನ್ನು ನೀಡಲಿದೆ. ಪ್ರವಾಹ ಪೀಡಿತ ಪ್ರದೇಶಗಳ ಎಲ್ಲ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಹಾರೈಸುತ್ತೇನೆ‘ ಎಂದು ಪ್ರಧಾನಿ ಹೇಳಿದ್ದಾರೆ.
ಭಾರಿ ಮಳೆ, ಪ್ರವಾಹದಿಂದಾಗಿ ಬುಧವಾರ ಜಮ್ಮು ಮತ್ತು ಕಾಶ್ಮೀ ರದ ಕಿಶ್ತವಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೆಲವು ಮನೆಗಳು ಕೊಚ್ಚಿ ಹೋಗಿವೆ. ಕುಸಿದ ಮನೆಯೊಂದರಿಂದ ಐದು ಶವಗಳನ್ನು ಹೊರತೆಗೆಯಲಾಗಿದೆ‘ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಜಾನೆ 4.30 ರ ಸುಮಾರಿಗೆ ಡಚ್ಚನ್ ತಹಸಿಲ್ನ ಹೊಂಜಾರ್ ಗ್ರಾಮದಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ 25 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು, ಸೇನೆ ಮತ್ತು ಎಸ್ಡಿಆರ್ಎಫ್ ತಂಡ, ಜಂಟಿಯಾಗಿ ಜಂಟಿ ರಕ್ಷಣಾ ಕಾರ್ಯ ಕೈಗೊಂಡಿವೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.