ನವದೆಹಲಿ: ಕೋವಿಡ್–19 ಪಿಡುಗಿನ ವಿರುದ್ಧ ದೇಶ ನಡೆಸುತ್ತಿರುವ ಹೋರಾಟದಲ್ಲಿ ವೈದ್ಯಕೀಯ ಮತ್ತು ನರ್ಸಿಂಗ್ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಕೋರ್ಸ್ ಪೂರ್ಣಗೊಳಿಸಿರುವವರನ್ನು ತೊಡಗಿಸಿಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕೋವಿಡ್–19 ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಪ್ರಸ್ತಾಪವಾಯಿತು ಎಂದು ಮೂಲಗಳು ಹೇಳಿವೆ.
ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತ ಹೆಚ್ಚಿನ ವಿವರಗಳು ಸೋಮವಾರ ಬಹಿರಂಗವಾಗುವ ಸಾಧ್ಯತೆಗಳಿವೆ ಎಂದು ಇದೇ ಮೂಲಗಳು ಹೇಳಿವೆ.
‘ಸ್ನಾತಕೋತ್ತರ ಪದವಿ ಪ್ರವೇಶ ಪಡೆಯಲಿಕ್ಕಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಮುಂದೂಡುವುದು. ಈ ಪರೀಕ್ಷೆಗಾಗಿ ಅಧ್ಯಯನ ಮಾಡುತ್ತಿರುವ ಎಂಬಿಬಿಎಸ್ ಪದವೀಧರರನ್ನು ಕೋವಿಡ್ ಕರ್ತವ್ಯಕ್ಕೆ ಸೇರಿಕೊಳ್ಳುವಂತೆ ಪ್ರೋತ್ಸಾಹಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ಮೂಲಗಳು ಹೇಳಿವೆ.
‘ಎಂಬಿಬಿಎಸ್ ಹಾಗೂ ನರ್ಸಿಂಗ್ ಕೋರ್ಸ್ನ ಅಂತಿಮ ವರ್ಷದ ವಿದ್ಯಾರ್ಥಿಗಳ ಸೇವೆಯನ್ನು ಸಹ ಪಡೆಯುವ ಬಗ್ಗೆ ಸಭ ಚರ್ಚಿಸಿದ್ದು, ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ’ ಎಂದು ಹೇಳಿವೆ.
‘ಈಗಾಗಲೇ ಕೋವಿಡ್–19 ಕರ್ತವ್ಯದ ಮೇಲಿರುವವರಿಗೆ ಮುಂದಿನ ದಿನಗಳಲ್ಲಿ ನಡೆಯುವ ನೇಮಕಾತಿಯಲ್ಲಿ ಆದ್ಯತೆ ಹಾಗೂ ಪ್ರೋತ್ಸಾಹ ಧನ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ’ ಎಂದು ಇವೇ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.