ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕಾರ್ಯತಂತ್ರ ಕುರಿತು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಉಕ್ರೇನ್ನಿಂದಈವರೆಗೆ ಎಷ್ಟು ಜನರನ್ನು ಭಾರತಕ್ಕೆ ಕರೆತರಲಾಗಿದೆ. ಇನ್ನು ಎಷ್ಟು ಜನರನ್ನು ಸ್ಥಳಾಂತರ ಮಾಡಬೇಕಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು. ಜತೆಗೆ, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.
ಭಾರತೀಯರ ಸ್ಥಳಾಂತರ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಉಕ್ರೇನ್ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ನಾಲ್ವರು ಸಚಿವರು ಈಗಾಗಲೇ ಉಕ್ರೇನ್ ನೆರೆ ರಾಷ್ಟ್ರಗಳಿಗೆ ತೆರಳಿದ್ದಾರೆ.
ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾಗಳಿಗೆ ತೆರಳಿದ್ದಾರೆ.
ಮಂಗಳವಾರ ಒಂದೇ ದಿನ ಸುಮಾರು 2 ಸಾವಿರ ಭಾರತೀಯರನ್ನು ಸ್ಥಳಾಂತರ ಮಾಡಲಾಗಿದೆ. ಮುಂದಿನ 2 ದಿನಗಳಲ್ಲಿ 4ರಿಂದ 5 ಸಾವಿರ ಜನರನ್ನು ಸ್ಥಳಾಂತರ ಮಾಡಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.