ADVERTISEMENT

ರಾಮ ನವಮಿ ಸಂಘರ್ಷ: ಜೆಎನ್‌ಯುನಿಂದ ವರದಿ ಕೇಳಿದ ದೆಹಲಿ ಸರ್ಕಾರ

ಪಿಟಿಐ
Published 12 ಏಪ್ರಿಲ್ 2022, 13:02 IST
Last Updated 12 ಏಪ್ರಿಲ್ 2022, 13:02 IST
   

ನವದೆಹಲಿ: ರಾಮ ನವಮಿ ಸಂದರ್ಭದಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ನಡೆದ ಘರ್ಷಣೆ ವಿಚಾರವಾಗಿ ದೆಹಲಿ ಸರ್ಕಾರದ ಶಿಕ್ಷಣ ಸಚಿವಾಲಯವು ಜವಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು) ವಿಶ್ವವಿದ್ಯಾಲಯದಿಂದ ಮಂಗಳವಾರ ವರದಿ ಕೇಳಿದೆ.

‘ವಿದ್ಯಾರ್ಥಿಗಳ ಗುಂಪುಗಳ ನಡುವೆ ನಡೆದ ಘರ್ಷಣೆ ಮತ್ತು ವಿಶ್ವವಿದ್ಯಾಲಯದ ಆವರಣದಲ್ಲಿ ಅಶಾಂತಿ ಸೃಷ್ಟಿಸಿದ ಬಗ್ಗೆ ಔಪಚಾರಿಕ ವರದಿಯೊಂದನ್ನು ಕೇಳಲಾಗಿದೆ’ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ರಾಮ ನವಮಿ ದಿನ ಭಾನುವಾರ ಜೆಎನ್‌ಯು ವಿಶ್ವವಿದ್ಯಾಲಯದ ಮೆಸ್‌ನಲ್ಲಿ ಮಾಂಸಾಹಾರವನ್ನು ನೀಡಿದ್ದರಿಂದ ಇಲ್ಲಿಯ ಕಾವೇರಿ ಹಾಸ್ಟೆಲ್‌ನ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ 20 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ADVERTISEMENT

ಎರಡೂ ವಿದ್ಯಾರ್ಥಿ ಗುಂಪುಗಳು ಸೋಮವಾರ ಒಬ್ಬರ ವಿರುದ್ಧ ಮತ್ತೊಬ್ಬರು ದೂರು ದಾಖಲಿಸಿದ್ದಾರೆ. ವಿಶ್ವವಿದ್ಯಾಲಯದ ಆವರಣದಲ್ಲಿ ಯಾವುದೇ ರೀತಿಯ ಹಿಂಸಾಚಾರ ನಡೆಸುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜೆಎನ್‌ಯು ಆಡಳಿತ ವಿದ್ಯಾರ್ಥಿಗಳಿಗೆ ಎಚ್ಚರಿಸಿದೆ.

ವಿಶ್ವವಿದ್ಯಾಲಯದ ಆವರಣದಲ್ಲಿ ಯಾವುದೇ ಬಗೆಯ ಹಿಂಸಾಚಾರ ನಡೆಯದಂತೆ ನಿಗಾ ವಹಿಸಬೇಕು ಎಂದು ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ಮಂಗಳವಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.