ADVERTISEMENT

ಕೇಂದ್ರ ಸರ್ಕಾರದ ಮೊಂಡುತನದಿಂದ ರೈತರಿಗೆ ಬಿಕ್ಕಟ್ಟು: ರೈತ ಸಂಘಟನೆ

ಪಿಟಿಐ
Published 15 ಫೆಬ್ರುವರಿ 2021, 1:48 IST
Last Updated 15 ಫೆಬ್ರುವರಿ 2021, 1:48 IST
ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)   

ಇಂದೋರ್: ಕೇಂದ್ರ ಸರ್ಕಾರದ ಮೊಂಡುತನ ರೈತರ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸಮನ್ವಯ ಸಮಿತಿ ಸದಸ್ಯ ಶಿವ ಕುಮಾರ್ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷ್ಟಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರೂ ಇದುವರೆಗೆ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಎಸ್‌ಕೆಎಂ ಆರೋಪಿಸಿದೆ.

ಸಂಯುಕ್ತ ಕಿಸಾನ್ ಮೋರ್ಚಾ 40 ರೈತ ಸಂಘಟನೆಗಳ ಒಕ್ಕೂಟವಾಗಿದ್ದು, ರೈತರ ಪ್ರತಿಭಟನೆಯನ್ನು ಮುನ್ನಡೆಸುತ್ತಿದೆ.

ADVERTISEMENT

ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮೊಂಡುತನ ಬಿಕ್ಕಟ್ಟಿಗೆ ಕಾರಣವಾಗಿದೆ. ನಾವು ಈಗಾಗಲೇ 12 ಸುತ್ತಿನ ಮಾತುಕತೆ ನಡೆಸಿದ್ದೇವೆ. ಆದರೆ ಕನಿಷ್ಠ ಬೆಂಬಲ ಬೆಲೆ ಕುರಿತು (ಎಂಎಸ್‌ಪಿ) ಕಾನೂನು ಖಾತ್ರಿಗೊಳಿಸಲು ಇನ್ನೂ ಸರ್ಕಾರ ಸಿದ್ಧವಾಗಿಲ್ಲ ಎಂದವರು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದುವರೆಗೆ ದಿನಾಂಕ ನಿಗದಿಪಡಿಸುವುದಾಗಲೀ ಅಥವಾ ಮುಂದಿನ ಸುತ್ತಿನ ಮಾತುಕತೆಗೆ ಆಹ್ವಾನ ನೀಡುವುದಾಗಲೀ ಮಾಡಿಲ್ಲ ಎಂದು ಹೇಳಿದರು.

ನೂತನ ಕೃಷಿ ಕಾಯ್ದೆಗಳು ರೈತರ ಪಾಲಿಗೆ 'ಡೆತ್ ವಾರೆಂಟ್' ಆಗಿದ್ದು, ಸರ್ಕಾರ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಹೊಂದಿದ್ದರೆ ವಿವಾದಿತ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಏತನ್ಮಧ್ಯೆ ರೈತರ ಪ್ರತಿಭಟನೆಯನ್ನು ದೇಶದೆಲ್ಲೆಡೆ ವ್ಯಾಪಿಸಲು ನಿರ್ಧರಿಸಲಾಗಿದ್ದು, ಹಲವೆಡೆ ಮಹಾ ಪಂಚಾಯಿತಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಪ್ರಮುಖ ರೈತ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.