ನವದೆಹಲಿ: ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ನಿರ್ಧರಿಸುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆರೋಗ್ಯಸೇವಾ ವಲಯಗಳ ಬಹುದಿನದ ಬೇಡಿಕೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿ ಕೇಳಲಾಗಿದ್ದ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಿದ್ದಾರೆ.
ಆರ್ಟಿಐ ಅಡಿ ಪಿಟಿಐ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಗೆ ಸಚಿವಾಲಯ ಹೀಗೆ ಉತ್ತರಿಸಿದೆ. ‘ಈ ಕುರಿತು ಸದ್ಯ ಯಾವುದೇ ಮಾರ್ಗಸೂಚಿಗಳನ್ನು ರೂಪಿಸಿಲ್ಲ. ಮಾರ್ಗಸೂಚಿ ರೂಪಿಸುವಂತೆ ಸಲ್ಲಿಕೆಯಾಗಿರುವ ಬೇಡಿಕೆಗಳನ್ನು ಪರಿಗಣಿಸಲಾಗುತ್ತಿದೆ’ ಎಂದು ಹೇಳಿದೆ.
ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಶಾಸನಬದ್ಧ ನಿಯಮಗಳನ್ನು ರೂಪಿಸುವಂತೆ ಮತ್ತು ಇದಕ್ಕಾಗಿ ವೈದ್ಯಕೀಯ ಶಿಕ್ಷಣ ನಿಯಂತ್ರಕವಾದ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ನೆರವು ಪಡೆಯುವಂತೆ 17 ವರ್ಷಗಳ ಹಿಂದೆಯೇ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಶಾಸನಬದ್ಧ ಮಾರ್ಗಸೂಚಿಯು ರೋಗಿಗಳ ಹಿತಾಸಕ್ತಿ ಮಾತ್ರವಲ್ಲದೇ, ವೈದರ ಮೇಲೆ ನಡೆಯುವ ಹಿಂಸಾಚಾರವನ್ನೂ ತಡೆಯುತ್ತದೆ ಎಂದು ಕಾನೂನು ಮತ್ತು ವೈದ್ಯಕೀಯ ತಜ್ಞರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.