ನವದೆಹಲಿ: 2002ರಲ್ಲಿ ಗುಜರಾತ್ನ ಗೋಧ್ರಾ ಗಲಭೆ ವೇಳೆ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಎಸ್ಐಟಿ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ದಿವಂಗತ ಎಹಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅ. 26ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಹಾಗೂ ಸಿ.ಟಿ. ರವಿಕುಮಾರ್ ಅವರನ್ನೊಳ ಗೊಂಡ ನ್ಯಾಯಪೀಠವು, ‘ಅರ್ಜಿದಾರರ ವಿನಂತಿಯ ಮೇರೆಗೆ ವಿಚಾರಣೆಯನ್ನು ಅ. 26ಕ್ಕೆ ಮುಂದೂಡಲಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಅರ್ಜಿಯ ವಿಚಾರಣೆಯ ದಿನಾಂಕವನ್ನು ಮುಂದೂಡುವ ಮನವಿಯನ್ನು ಪರಿಗಣಿಸಲಾಗದು’ ಎಂದು ಸ್ಪಷ್ಟಪಡಿಸಿದೆ.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿಗೆ ಸಂಬಂಧಿಸಿದಂತೆ ಸುಮಾರು 23 ಸಾವಿರ ಪುಟಗಳಷ್ಟು ದಾಖಲೆ ಲಭ್ಯವಾಗಿದ್ದು, ಈ ಮಾಹಿತಿಯನ್ನು ಸೇರಿಸುವ ಸಲುವಾಗಿ ಅರ್ಜಿಯ ವಿಚಾರಣೆ ಮುಂದೂಡಲು ಮನವಿ ಸಲ್ಲಿಸಲಾಗಿತ್ತು’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ‘ಇದನ್ನು ಗಮನದಲ್ಲಿಟ್ಟುಕೊಂಡೇ ಈಗಾಗಲೇ ಅರ್ಜಿದಾರರಿಗೆ ಹೆಚ್ಚಿನ ಮಾಹಿತಿಯನ್ನು ಸೇರಿಸಲು ಮುಂಚಿತವಾಗಿಯೇ ಅವಕಾಶ ಕಲ್ಪಿಸಲಾಗಿದೆ’ ಎಂದು ಸ್ಪಷ್ಟಪಡಿಸಿತು.
2002ರ ಫೆ. 27ರಂದು ಗುಜರಾತ್ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ಸಬರಮತಿ ಏಕ್ಸ್ಪ್ರೆಸ್ ರೈಲಿನ ಎಸ್–6 ಕೋಚ್ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವಿಗೀಡಾದ್ದರು. ಮರುದಿನ (ಫೆ. 28) ಅಹಮದಾಬಾದ್ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡದಲ್ಲಿ ಸಾವಿಗೀಡಾದ 68 ಜನರಲ್ಲಿ ಕಾಂಗ್ರೆಸ್ ಮಾಜಿ ಸಂಸದ ಎಹಸಾನ್ ಜಾಫ್ರಿ ಕೂಡಾ ಒಬ್ಬರಾಗಿದ್ದರು.
2012ರ ಫೆ. 28ರಂದು ಎಸ್ಐಟಿ ಮುಚ್ಚಿದ ವರದಿ ಸಲ್ಲಿಸಿತ್ತು. ‘ಗಲಭೆಯಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಹಾಗೂ ಇತರ 63 ಹಿರಿಯ ಅಧಿಕಾರಿಗಳ ವಿರುದ್ಧ ಯಾವುದೇ ಪುರಾವೆಗಳಿಲ್ಲ’ ಎಂದು ಎಸ್ಐಟಿ ವರದಿಯಲ್ಲಿ ಕ್ಲೀನ್ ಚಿಟ್ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.