ಗಲಭೆಯ ಬಳಿಕದ ದೃಶ್ಯಗಳು
– ಪಿಟಿಐ ಚಿತ್ರ
ಅಹಮದಾಬಾದ್: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ದೇಘಂ ತಾಲ್ಲೂಕಿನ ಬಹಿಯಾಲ್ ಗ್ರಾಮದಲ್ಲಿ ನಡೆದ ಘರ್ಷಣೆ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 60 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಐದು ಅಂಗಡಿಗಳು ಹಾಗೂ 6 ವಾಹನಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.
ಸದ್ಯ ನಡೆಯುತ್ತಿರುವ ‘ಐ ಲವ್ ಮೊಹಮ್ಮದ್’ ಟ್ರೆಂಡ್ ಬಗ್ಗೆ ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಗಾಂಧಿನಗರ ಪೊಲೀಸ್ ವರಿಷ್ಠಾಧಿಕಾರಿ ತೇಜ ವಸಂಸೆಟ್ಟಿ ತಿಳಿಸಿದ್ದಾರೆ.
ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಾಟ್ಸ್ಆ್ಯಪ್ನಲ್ಲಿ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ವ್ಯಕ್ತಿಯ ಅಂಗಡಿಯ ಷಟರ್ ಮುರಿದ ಆಕ್ರೋಶಿತ ಗುಂಪು ವಸ್ತುಗಳನ್ನೆಲ್ಲಾ ಹೊರಗೆ ಎಸೆದು ಬೆಂಕಿ ಹಚ್ಚಿದೆ ಎಂದು ಅವರು ತಿಳಿಸಿದ್ದಾರೆ.
ಬಳಿಕ ಗುಂಪು, ಹಿಂದೂ ಪ್ರದೇಶಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತೀಕಾರವಾಗಿ ಆ ಕಡೆಯಿಂದಲೂ ಕಲ್ಲು ತೂರಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.