ಬೆಂಗಳೂರು: ಕಾಶಿ ವಿಶ್ವನಾಥ ಮಂದಿರದ ಸಮೀಪದಲ್ಲಿ ಇರುವ ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿ, 'ಮುಸ್ಲಿಮರು ಆ ಕಾನೂನನ್ನು ಗೌರವಿಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೇವೆ' ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
'ಮುಸ್ಲಿಂ ಲೀಗ್ನ ಮಾತೃಭೂಮಿಯ ಆಶಯದಂತೆ ಭಾರತವು ವಿಭಜನೆಗೊಂಡಿದೆ. ಭಾರತದಲ್ಲೇ ಉಳಿದ ಮುಸ್ಲಿಮರು ಸಂವಿಧಾನವನ್ನು ಒಪ್ಪಿಕೊಂಡಿದ್ದಾರೆ.ಆದ್ದರಿಂದ ಕಾನೂನು ಹಿಂದೂ ಪರವಾಗಿದ್ದರೆ ಜ್ಞಾನವಾಪಿ ಪ್ರದೇಶವನ್ನು ಹಿಂದೂಗಳಿಗೆ ಮರಳಿ ನೀಡಬೇಕು, ಮುಸ್ಲಿಮರು ಆ ಕಾನೂನನ್ನು ಗೌರವಿಸುತ್ತಾರೆ ಎಂದು ನಿರೀಕ್ಷಿಸಿದ್ದೇವೆ' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ಕೋರಿ ಅಂಜುಮಾನ್ ಎ ಇಂತೆಜಮಿಯಾ ಸಂಸ್ಥೆಯು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ವಿಚಾರಣೆಗೆ ಎತ್ತಿಕೊಳ್ಳಲಿದೆ.
ಸಮೀಕ್ಷೆ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ.
ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಲು ಸುಪ್ರೀಂ ಕೋರ್ಟ್ ಇದೇ 13ರಂದು ನಿರಾಕರಿಸಿತ್ತು. ಬದಲಿಗೆ, ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.