ADVERTISEMENT

ಜ್ಞಾನವಾಪಿ ಮಸೀದಿ ಸಮೀಕ್ಷೆ ಮುಂದುವರಿಕೆ: ಅಧಿಕಾರಿ ಬದಲಾವಣೆ ಇಲ್ಲ– ನ್ಯಾಯಾಲಯ

ಐಎಎನ್ಎಸ್
Published 12 ಮೇ 2022, 10:30 IST
Last Updated 12 ಮೇ 2022, 10:30 IST
ಜ್ಞಾನವಾಪಿ
ಜ್ಞಾನವಾಪಿ    

ವಾರಾಣಸಿ(ಉತ್ತರ ಪ್ರದೇಶ): ಜ್ಞಾನವಾಪಿ ಮಸೀದಿಯ ಶೃಂಗಾರ್ ಗೌರಿ ಕಾಂಪ್ಲೆಕ್ಸ್‌ನ ವಿಡಿಯೊ ಸಮೀಕ್ಷೆಗೆ ನೇಮಕ ಮಾಡಲಾಗಿರುವ ಅಡ್ವೊಕೇಟ್ ಕಮೀಷನರ್ ಬದಲಾವಣೆಗೆ ನಿರಾಕರಿಸಿರುವ ವಾರಾಣಸಿಯ ಜಿಲ್ಲಾ ನ್ಯಾಯಾಲಯವು, ಅವರಿಗೆ ನೆರವು ನೀಡಲು ಇನ್ನೂ ಇಬ್ಬರು ಸಹಾಯಕ ಕಮೀಷನರ್‌ಗಳನ್ನು ನೇಮಿಸಿದೆ.

ಇದೇವೇಳೆ, ಮೇ 17ರ ಒಳಗೆ ಸಮೀಕ್ಷೆ ಮುಗಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ನಿರ್ದೆಶನ ನೀಡಿದೆ ಎಂದು ಜ್ಞಾನವ್ಯಾಪಿ ಮಸೀದಿ ಆಡಳಿತ ಸಮಿತಿಯ ಪರ ವಕೀಲ ಅಭಯ ನಾಥ್ ಯಾದವ್‌ ಹೇಳಿದ್ದಾರೆ. ಸದ್ಯದಲ್ಲೇ, ಉನ್ನತ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವುದಾಗಿ ಅವರು ಹೇಳಿದ್ದಾರೆ.

ಮಸೀದಿಯ ನೆಲಮಾಳಿಗೆಯನ್ನು ವಿಡಿಯೊಗ್ರಫಿಗೆ ತೆರೆಯಬೇಕೆಂಬ ಮನವಿಗಳನ್ನು ಆಲಿಸಿದ್ದ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು, ಹಿಂದೂ–ಮುಸ್ಲಿಮರ ಎರಡೂ ಕಡೆಯ ವಾದಗಳನ್ನು ಆಲಿಸಿ ಈ ತೀರ್ಪು ನೀಡಿದ್ದಾರೆ.

ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆಗೆ ಕೋರ್ಟ್‌ನಿಂದ ನೇಮಕವಾಗಿರುವ ಅಜಯ್ ಕುಮಾರ್ ಮಿಶ್ರಾ ಅವರನ್ನು ಬದಲಾಯಿಸುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಕಮೀಷನರ್ ಪಕ್ಷಪಾತಿಯಾಗಿದ್ದಾರೆ ಎಂದು ಸಮಿತಿ ಆರೋಪಿಸಿತ್ತು.

ADVERTISEMENT

ಹಿನ್ನೆಲೆ

ಜ್ಞಾನವಾಪಿ ಮಸೀದಿಯ ಹೊರಗಿನ ಗೋಡೆ ಮೇಲಿರುವ ಶೃಂಗಾರ್ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ಕೋರಿ ದೆಹಲಿಯ ಮಹಿಳೆಯರಾದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಾಧೀಶ ದಿವಾಕರ್ ಅವರು ಮಸೀದಿಯ ವಿಡಿಯೊಗ್ರಫಿ ಮತ್ತು ಸಮೀಕ್ಷೆಗೆ ಆದೇಶಿಸಿದ್ದರು.

ಏಪ್ರಿಲ್ 18, 2021ರಂದು ನ್ಯಾಯಾಲಯದ ಮೆಟ್ಟಿಲೇರಿದ್ದ ಮಹಿಳೆಯರು ಮಸೀದಿ ಗೊಡೆ ಮೇಲಿರುವ ವಿಗ್ರಹಗಳಿಗೆ ಯಾವುದೇ ಹಾನಿ ಮಾಡದಂತೆ ತಡೆಯಲು ನ್ಯಾಯಾಲಯದ ಆದೇಶವನ್ನು ಕೋರಿದ್ದರು.

ಆದರೆ, ಮಸೀದಿಯೊಳಗೆ ವಿಡಿಯೊಗ್ರಫಿ ಮಾಡಲು ನ್ಯಾಯಾಲಯವು ಯಾವುದೇ ಆದೇಶವನ್ನು ನೀಡಿಲ್ಲ. ಮಸೀದಿ ಪ್ರದೇಶವನ್ನು ಸುತ್ತುವರಿದ ಬ್ಯಾರಿಕೇಡ್‌ಗಳ ಹೊರಗೆ 'ಚಬುತ್ರ' (ಅಂಗಣ)ವರೆಗೆ ಮಾತ್ರ ಸಮೀಕ್ಷೆ ಮಾಡಬೇಕೆಂದು ಮಸೀದಿ ಆಡಳಿತ ಸಮಿತಿಯ ವಕೀಲರು ಈ ಹಿಂದೆ ವಾದಿಸಿದ್ದರು.

ನ್ಯಾಯಾಲಯದ ಆಯುಕ್ತರು ಶುಕ್ರವಾರ ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣದಲ್ಲಿರುವ ಮಸೀದಿಯ ಹೊರಗಿನ ಕೆಲವು ಪ್ರದೇಶಗಳಲ್ಲಿ ಎರಡು ಕಡೆಯವರ ಘೋಷಣೆಗಳ ನಡುವೆ ಅನಿರ್ದಿಷ್ಟ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ, ನ್ಯಾಯಾಲಯದಿಂದ ನೇಮಕಗೊಂಡ ಕಮಿಷನರ್ ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಮುಸ್ಲಿಂ ಕಡೆಯವರು ಆರೋಪಿಸಿದ್ದರು. ಕೋರ್ಟ್ ಆದೇಶವಿಲ್ಲದೆ ಅವರು ಜ್ಞಾನವಾಪಿ ಮಸೀದಿಯೊಳಗೆ ವಿಡಿಯೋಗ್ರಫಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಿ ಅವರನ್ನು ಬದಲಾಯಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.