ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ನಡೆಸುತ್ತಿರುವ ವೈಜ್ಞಾನಿಕ ಸಮೀಕ್ಷೆ ಕುರಿತ ಮಾಧ್ಯಮ ಪ್ರಸಾರ ನಿಷೇಧಿಸುವಂತೆ ಕೋರಿ ಜ್ಞಾನವಾಪಿ ನಿರ್ವಹಣಾ ಸಮಿತಿ ಇಲ್ಲಿನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ಇಲ್ಲಿನ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ವಾರಾಣಸಿ ನ್ಯಾಯಾಲಯವು ಜುಲೈನಲ್ಲಿ ಎಎಸ್ಐಗೆ ನಿರ್ದೇಶನ ನೀಡಿತ್ತು. ಇದನ್ನು ಅಲಹಾಬಾದ್ ಹೈಕೋರ್ಟ್ ಮತ್ತು ನಂತರ ಸುಪ್ರೀಂ ಕೋರ್ಟ್ ಎತ್ತಿಹಿಡಿದವು.
ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯ ಜಂಟಿ ಕಾರ್ಯದರ್ಶಿ ಸೈಯದ್ ಮೊಹಮ್ಮದ್ ಯಾಸಿನ್ ಮಾತನಾಡಿ, ‘ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪುರಾತತ್ವ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ತಂಡ ಅಥವಾ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಪತ್ರಿಕೆಗಳು, ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಸುದ್ದಿಗಳನ್ನು ನಿರಂತರವಾಗಿ ಪ್ರಸಾರ ಮಾಡಲಾಗುತ್ತಿದೆ. ಇದು ಜನರ ಮನಸ್ಸಿನ ಮೇಲೆ ತಪ್ಪು ಪರಿಣಾಮ ಬೀರುತ್ತದೆ ಮತ್ತು ಅಂತಹ ಸುದ್ದಿಗಳನ್ನು ಪ್ರಕಟಿಸುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.
ಶನಿವಾರ ನಡೆದ ಸಮೀಕ್ಷೆ ವೇಳೆ, ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹಗಳು, ತ್ರಿಶೂಲ ಮತ್ತು ಪಾತ್ರೆಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮಗಳು ವದಂತಿಗಳನ್ನು ಹರಡಿದವು. ಇದು ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಯಾಸಿನ್ ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.