ADVERTISEMENT

ಕೇರಳ: ಹಾದಿಯಾ ತಂದೆ ಅಶೋಕ್‌ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 9:34 IST
Last Updated 18 ಡಿಸೆಂಬರ್ 2018, 9:34 IST
ಅಶೋಕನ್‌ ಮತ್ತು ಹಾದಿಯಾ
ಅಶೋಕನ್‌ ಮತ್ತು ಹಾದಿಯಾ   

ತಿರುವಂತಪುರ: ಅಂತರ್‌ಧರ್ಮೀಯ ವಿವಾಹವಾಗಿಭಾರಿ ಚರ್ಚೆಗೆ ಗ್ರಾಸವಾಗಿದ್ದ ಕೇರಳದ ಅಖಿಲಾ (ಹಾದಿಯಾ) ಅವರ ತಂದೆ ಅಶೋಕನ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇರಳ ಬಿಜೆಪಿ ಮುಖ್ಯಸ್ಥ ಜಿ.ಗೋಪಾಲಕೃಷ್ಣ ಅವರು ಶಬರಿಮಲೆಯಲ್ಲಿ ಅಶೋಕನ್‌ ಸೇರಿ 50 ಮಂದಿಗೆ ಪಕ್ಷ ಸೇರ್ಪಡೆಯ ಅಧಿಕೃತ ಪತ್ರ ವಿತರಿಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಾದಿಯಾ ತಂದೆ, ’ಮೊದಲು ನಾನು ಸಿಪಿಎಂ ಕಾರ್ಯಕರ್ತನಾಗಿದ್ದ. ಆದರೆ, ಅಯ್ಯಪ್ಪನ ದೇವಸ್ಥಾನ ವಿಚಾರದಲ್ಲಿ ಪಕ್ಷ ಕೆಟ್ಟ ರಾಜಕೀಯ ಮಾಡುತ್ತಿದೆ. ಹಾಗಾಗಿ ನಾನು ಬಿಜೆಪಿ ಸೇರಲು ನಿರ್ಧರಿಸಿದೆ‘ ಎಂದು ತಿಳಿಸಿದರು.

‘ಮಗಳನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ. ಆಕೆಯನ್ನು ಜಿಹಾದಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಯತ್ನ ಇದು‘ ಎಂದುಅಶೋಕನ್‌ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ ನಂತರ ಹಾದಿಯಾ ಅಂತರ್‌ಧರ್ಮೀಯ ವಿವಾಹ ಚರ್ಚೆಗೆ ಗ್ರಾಸವಾಗಿತ್ತು.

ADVERTISEMENT

ತಮಿಳುನಾಡಿನ ಸೇಲಂನಲ್ಲಿ ಹೋಮಿಯೋಪಥಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಅಖಿಲಾ, ಶಫಿನ್ ಜಹಾನ್ ಎಂಬ ಮುಸ್ಲಿಂ ಯುವಕನನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ವರಿಸಿದ್ದರು. ನಂತರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಮ್ಮ ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡಿದ್ದರು.

2017 ಮೇ ತಿಂಗಳಲ್ಲಿ ತೀರ್ಪು ನೀಡಿದ್ದ ನ್ಯಾಯಾಲಯ ಶಫಿನ್‌–ಹಾದಿಯಾ ಮದುವೆಯನ್ನು ಅಸಿಂಧುಗೊಳಿಸಿತ್ತಲ್ಲದೇ ಯುವತಿಯನ್ನು ಪೋಷಕರಿಗೆ ಒಪ್ಪಿಸಿತ್ತು. ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಶಫಿನ್‌ 2018ರ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿತ್ತು. ಮದುವೆ ಅಸಿಂಧುಗೊಳಿಸುವ ಹಕ್ಕು ಹೈಕೋರ್ಟ್‌ಗೆ ಇದೆಯೇ ಎಂದು ಕೇಳಿತ್ತು. ಅಲ್ಲದೇ, ಇದು ಬಲವಂತದ ಮದುವೆ ಹೌದೇ ಅಲ್ಲವೇ ಎಂಬುದನ್ನು ತನಿಖೆ ನಡೆಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಸೂಚಿಸಿತ್ತು.

ನವೆಂಬರ್‌ 27ರಂದು ಸುಪ್ರೀಂ ಕೋರ್ಟ್‌ ಮುಂದೆ ಖುದ್ದಾಗಿ ಹಾಜರಾದ ಹಾದಿಯಾ, ಹೋಮಿಯೋಪಥಿ ಶಿಕ್ಷಣವನ್ನು ಮುಂದುವರೆಸುವ ಬಯಕೆ ವ್ಯಕ್ತಪಡಿಸಿದ್ದಲ್ಲದೆ ಪತಿ ಶಫಿನ್ ಜೊತೆಗೆ ಹೋಗುವುದಾಗಿಯೂ ತಿಳಿಸಿದ್ದರು.ಹಾದಿಯಾ ಮನವಿ ಮಾನ್ಯ ಮಾಡಿದ ಸುಪ್ರೀಂ ಕೋರ್ಟ್‌, ಸೇಲಂನಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಿತ್ತು. ಹಾದಿಯಾಗೆ ಅಗತ್ಯ ಭದ್ರತೆ ನೀಡುವಂತೆ ಕೇರಳ ಪೊಲೀಸರಿಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.