ಮುಂಬೈ: ಹನುಮಾನ್ ಚಾಲೀಸಾ ವಿವಾದದಲ್ಲಿ ಬಂಧನಕ್ಕೀಡಾಗಿರುವ ಮಹಾರಾಷ್ಟ್ರದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ಅವರ ಜಾಮೀನು ಅರ್ಜಿಯ ತೀರ್ಪನ್ನು ಮೇ 4ರಂದು ನೀಡುವುದಾಗಿ ಮುಂಬೈನ ವಿಶೇಷ ನ್ಯಾಯಾಲಯ ಸೋಮವಾರ ಹೇಳಿದೆ.
ದಂಪತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಕಳೆದ ಶನಿವಾರಕ್ಕೇ ಪೂರ್ಣಗೊಳಿಸಿತ್ತು. ಸೋಮವಾರ ಆದೇಶ ಪ್ರಕಟಿಸುವುದಾಗಿ ನ್ಯಾಯಮೂರ್ತಿ ಆರ್. ಎನ್ ರೋಕಡೆ ಹೇಳಿದ್ದರು. ಆದರೆ, ನ್ಯಾಯಾಲಯವು ಇತರ ಪ್ರಕರಣಗಳ ವಿಚಾರಣೆಯಲ್ಲಿ ನಿರತವಾಗಿರುವುದರಿಂದ ಆದೇಶವನ್ನು ಮೇ 4ಕ್ಕೆ ನೀಡುವುದಾಗಿ ಸೋಮವಾರ ಹೇಳಿತು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ ನಿವಾಸ ‘ಮಾತೋಶ್ರೀ’ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ಅವರ ವಿರುದ್ಧ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜಾಮೀನು ಕೋರಿ ರಾಣಾ ದಂಪತಿ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.