ಅರವಿಂದ ಕೇಜ್ರಿವಾಲ್
ಪಿಟಿಐ ಚಿತ್ರ
ನವದೆಹಲಿ: ಉತ್ತರಾಖಂಡದ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಆಡಳಿತ ವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಭಾನುವಾರ ಬೆಳಗ್ಗೆ ದೇವಸ್ಥಾನದ ಬಳಿ ಭಾರಿ ಜನಸಂದಣಿಯಿಂದಾಗಿ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕೇಜ್ರಿವಾಲ್ ಘಟನೆಯನ್ನು ಅತ್ಯಂತ ದುಃಖದಾಯಕ ಎಂದು ಹೇಳಿದ್ದಾರೆ.
ಪವಿತ್ರ ನಗರ ಹರಿದ್ವಾರದಲ್ಲಿ ಸಂಭವಿಸಿದ ಕಾಲ್ತುಳಿತದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದೇವರು ಶಕ್ತಿ ತುಂಬಲಿ ಮತ್ತು ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಹೇಳಿದ್ದಾರೆ.
ಆಧ್ಯಾತ್ಮಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ಸಂಭವಿಸಲು ಆಡಳಿತ ವ್ಯವಸ್ಥೆಯ ವೈಫಲ್ಯ ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯವೇ ಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ದೇವಾಲಯದ ಮೆಟ್ಟಿಲುಗಳ ಬಳಿ ವಿದ್ಯುತ್ ಪ್ರವಹಿಸಿದೆ ಎಂಬ ವದಂತಿ ಹರಡಿದ ಪರಿಣಾಮ ಭಕ್ತರು ಭಯಭೀತರಾಗಿ ಓಡಿಹೋಗುವ ವೇಳೆ ಕಾಲ್ತುಳಿತ ಸಂಭವಿಸಿದೆ. ಗಾಯಗೊಂಡ 35 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ಸಿಂಗ್ ದೋಬಾಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.