ADVERTISEMENT

ಹರಿಯಾಣ: ನಾಯಕತ್ವ ಬದಲಾವಣೆಗೆ ಕಾಂಗ್ರೆಸ್‌ ಶಾಸಕರ ಸಲಹೆ

ಪಿಟಿಐ
Published 2 ಜುಲೈ 2021, 14:52 IST
Last Updated 2 ಜುಲೈ 2021, 14:52 IST
ಕಾಂಗ್ರೆಸ್‌
ಕಾಂಗ್ರೆಸ್‌    

ಚಂಡೀಗಡ: ಹರಿಯಾಣದಲ್ಲಿ ಕಾಂಗ್ರೆಸ್‌ನ 19 ಶಾಸಕರು ಪಕ್ಷದ ನಾಯಕತ್ವ ಬದಲಾವಣೆ ಬಯಸಿದ್ದು, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರಿಗೆ ಪ್ರಮುಖ ಸ್ಥಾನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರಿಯಾಣದಲ್ಲಿನ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯೊಂದಿಗೆ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು.

ಕಳೆದ ಎಂಟು ವರ್ಷಗಳಿಂದ ರಾಜ್ಯದ ಜಿಲ್ಲಾ ಘಟಕಗಳಲ್ಲಿ ಪಕ್ಷದ ವತಿಯಿಂದ ಅಧ್ಯಕ್ಷರೇ ಇಲ್ಲ ಎಂಬ ವಿಚಾರವನ್ನು ಇದೇ ವೇಳೆ ಶಾಸಕರು ಸಭೆಯ ಗಮನಕ್ಕೆ ತಂದಿದ್ದಾರೆ.

ADVERTISEMENT

‘ಪಕ್ಷದ ಬಲವರ್ಧನೆಗೆ ಪ್ರಬಲ ನಾಯಕತ್ವದ ಅಗತ್ಯವಿದೆ. ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಸನ್ನಿವೇಶಗಳನ್ನು ಪಕ್ಷದ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ನಾಯಕತ್ವ ಬದಲಾವಣೆ ಅಗತ್ಯ’ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 31 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ.

ರಾಜ್ಯದ ಉಸ್ತುವಾರಿ ಬನ್ಸಾಲ್‌ ಅವರನ್ನು ಶಾಸಕರು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ಕುಮಾರಿ ಶೆಲ್ಜಾ, ಪಕ್ಷದ ಉಸ್ತುವಾರಿಯನ್ನು ಶಾಸಕರು ಭೇಟಿಯಾಗುವುದು ತಪ್ಪಲ್ಲ. ಇದು ಅಶಿಸ್ತು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.