ನವದೆಹಲಿ: ಹಾಥರಸ್ನ ದಲಿತ ಯುವತಿಮೇಲಿನ ಅತ್ಯಾಚಾರ ಮತ್ತು ಸಾವಿನ ಪ್ರಕರಣದಲ್ಲಿ ಪೊಲೀಸರು, ವೈದ್ಯಕೀಯ ಸಿಬ್ಬಂದಿ ಮತ್ತು ಸರ್ಕಾರದ ಅಧಿಕಾರಿಗಳ ಕೈವಾಡವಿದ್ದು, ಅವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.
ಮಹಾರಾಷ್ಟ್ರ ಮೂಲದ ದಲಿತ ಹಕ್ಕುಗಳ ಹೋರಾಟಗಾರ ಚೇತನ್ ಜನಾರ್ದನ್ ಕಾಂಬ್ಳೆ,ವಕೀಲ ವಿಪಿನ್ನಾಯರ್ ಮೂಲಕ ಪಿಐಎಲ್ ಸಲ್ಲಿಸಿದ್ದಾರೆ. ಈ ಘಟನೆಯು ಸಮಾಜದ ಆತ್ಮಸಾಕ್ಷಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಆರೋಪಿಗಳು ಆಡಳಿತ ಯಂತ್ರಗಳನ್ನೇ ಗುರಾಣಿಯಾಗಿಸಿಕೊಂಡಿದ್ದಾರೆ ಎಂದು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರಿ ಆಸ್ಪತ್ರೆಗಳು ಸಿದ್ಧಪಡಿಸಿದ ವೈದ್ಯಕೀಯ ವರದಿಗಳನ್ನು ಮುಚ್ಚಿ ಹಾಕುವುದು ಹಾಗೂ ಸಂತ್ರಸ್ತೆಯ ಕುಟುಂಬದವರ ಆಕ್ಷೇಪಣೆಗಳ ನಡುವೆಯೂ ಆರೋಪಿಗಳನ್ನು ರಕ್ಷಿಸಲು ಪೊಲೀಸ್ ಸಿಬ್ಬಂದಿಯು ಸಂತ್ರಸ್ತೆಯ ಶವ ದಹನ ಮಾಡಿರುವುದು, ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಸೇರಿದಂತೆ ಕೆಲ ಮಾಹಿತಿಗಳನ್ನು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ. ಈ ಅರ್ಜಿಯ ವಿಚಾರಣೆ ಗುರುವಾರ ನಡೆಯುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.