ADVERTISEMENT

ಶ್ರೀಕೃಷ್ಣ ಜನ್ಮಭೂಮಿ ವಿವಾದ: 4 ತಿಂಗಳೊಳಗೆ ವಿಲೇವಾರಿ ಮಾಡಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 12 ಮೇ 2022, 14:37 IST
Last Updated 12 ಮೇ 2022, 14:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಶ್ರೀಕೃಷ್ಣ ಜನ್ಮಭೂಮಿ ಇರುವ ಸಂಪೂರ್ಣ ಜಾಗದ ಮಾಲೀಕತ್ವದ ಹಕ್ಕು ನೀಡುವುದು ಮತ್ತು ಅದರ ಪಕ್ಕದ ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ ಮಥುರಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಸಲೀಲ್ ಕುಮಾರ್ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು. ಈ ವಿಷಯದಲ್ಲಿ ಎಲ್ಲಾ ಕಕ್ಷಿದಾರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿವಾದದಲ್ಲಿ ಪ್ರತಿವಾದಿಯಾಗಿರುವ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ವಿಚಾರಣೆಗೆ ಗೈರು ಹಾಜರಾದರೂ ಆದೇಶವನ್ನು ಹೊರಡಿಸಬೇಕು ಎಂದು ಜಿಲ್ಲಾ ನ್ಯಾಯಾಲಯಕ್ಕೆ ಸೂಚಿಸಿತು.

ಈ ಪ್ರಕರಣದ ಅರ್ಜಿಗಳನ್ನು ನಿತ್ಯ ವಿಚಾರಣೆ ನಡೆಸಿ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಿಂದೂ ಸಂಘಟನೆಯ ನಾಯಕರೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ, ಹೈಕೋರ್ಟ್‌ ಈ ಆದೇಶ ನೀಡಿದೆ.

ADVERTISEMENT

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದಂತೆ ಮಥುರಾ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಒಂಬತ್ತು ಅರ್ಜಿಗಳು ಬಾಕಿ ಉಳಿದಿವೆ. ಈ ಎಲ್ಲಾ ಅರ್ಜಿಗಳನ್ನು ಹಿಂದೂ ಸಮುದಾಯದವರು, ಸಂಘಟನೆಗಳು ಸಲ್ಲಿಸಿವೆ. ಈ ಪೈಕಿ ಒಂದು ಅರ್ಜಿಗೆ ಸಂಬಂಧಿಸಿದ ಆದೇಶವನ್ನುಮೇ 19 ಪ್ರಕಟಿಸಲು ಮಥುರಾ ನ್ಯಾಯಾಲಯ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.