ಅಹಮದಾಬಾದ್: 2002ರಲ್ಲಿ ನಡೆದಿದ್ದ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೊಕದ್ದಮೆಯಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಮಾಜಿ ಡಿಜಿಪಿ ಆರ್.ಬಿ. ಶ್ರೀಕುಮಾರ್(75) ಅವರಿಗೆ ಗುಜರಾತ್ ಹೈಕೋರ್ಟ್ ಬುಧವಾರ ನವೆಂಬರ್ 15ರ ವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೊತೆಗೆ, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವನ್ನೂ ನೀಡಿದೆ.
ಸೆಷನ್ಸ್ ನ್ಯಾಯಾಲಯದಲ್ಲಿ ಅವರು ಈ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಅರ್ಜಿಯನ್ನುತಿರಸ್ಕರಿಸಿ ನ್ಯಾಯಾಲಯ ಆದೇಶ ನೀಡಿತ್ತು. ಆದೇಶದ ವಿರುದ್ಧ ಶ್ರೀಕುಮಾರ್ ಅವರುಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆಗೆ ಬಾಕಿ ಇದ್ದಾಗಲೇ ಕಳೆದ ವಾರ ವಿಶೇಷ ತನಿಖಾ ತಂಡ (ಎಸ್ಐಟಿ) ಚಾರ್ಜ್ಶೀಟ್ ಸಲ್ಲಿಸಿತ್ತು. ಅರ್ಜಿಯು ವಿಚಾರಣೆಗೆ ಬಾಕಿ ಇರುವಂತೆಯೇ ಸನ್ನಿವೇಶಗಳು ಬದಲಾದ ಆಧಾರದಲ್ಲಿ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.
ಇದೇ ಮೊಕದ್ದಮೆಯ ಮತ್ತೊಬ್ಬ ಆರೋಪಿ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 15ಕ್ಕೆ ಹೈಕೋರ್ಟ್ ಮುಂದೂಡಿದೆ.
ಗುಜರಾತ್ ಗಲಭೆ ಮೊಕದ್ದಮೆಯಲ್ಲಿ ಗುಜರಾತ್ನ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಪ್ರಮುಖರನ್ನು ಸಿಲುಕಿಸಲು ಸಾಕ್ಷ್ಯಗಳನ್ನು ತಿರುಚಿದ್ದರು ಎಂಬ ಆರೋಪದ ಮೇಲೆ ಅವರನ್ನು ಜೂನ್ 25ರಂದು ಬಂಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.