ADVERTISEMENT

ಪಶ್ಚಿಮ ಬಂಗಾಳ: ಕಲ್ಕತ್ತಾ ಹೈಕೋರ್ಟ್‌ ಆದೇಶ ಶ್ಲಾಘಿಸಿದ ಬಿಜೆಪಿ

ಪಿಟಿಐ
Published 19 ಆಗಸ್ಟ್ 2021, 10:40 IST
Last Updated 19 ಆಗಸ್ಟ್ 2021, 10:40 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರದಲ್ಲಿ ನಡೆದ ಹಿಂಸಾಚಾರದ ಗಂಭೀರ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿರುವ ಕಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಶ್ಲಾಘಿಸಿರುವ ಬಿಜೆಪಿ, ಈ ಮೂಲಕ ನ್ಯಾಯಾಲಯವು ದೇಶದ ಯಾವುದೇ ಭಾಗದಲ್ಲಿ ಅರಾಜಕತೆಗೆ ಸ್ಥಾನವಿಲ್ಲ‘ ಎಂಬ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ಹೇಳಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿ ಮತ್ತು ಹೈಕೋರ್ಟ್‌ನ ಆದೇಶದಲ್ಲಿ ಉಲ್ಲೇಖಿಸಿ ಮಾತನಾಡಿ, ‘ಈ ವರದಿ ಮತ್ತು ಆದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿದ ನಂತರ ರಾಜ್ಯದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಜನರು ನೀಡಿದ ದೂರುಗಳನ್ನು ರಾಜ್ಯ ಪೊಲೀಸರು ಆಲಿಸಲಿಲ್ಲ. ರಾಜ್ಯ ಸರ್ಕಾರ ಕೂಡ ಹಿಂಸಾಚಾರದಲ್ಲಿ ಭಾಗಿಯಾದ ಅಪರಾಧಿಗಳಿಗೆ ರಕ್ಷಣೆ ಒದಗಿಸಿರುವುದಾಗಿ ಉಲ್ಲೇಖಿಸಲಾಗಿದೆ‘ ಎಂದರು. ಅದೇ ರೀತಿ, ಈ ಪ್ರಕರಣಗಳ ಆರೋಪಿಗಳು ತೃಣಮೂಲ ಕಾಂಗ್ರೆಸ್‌ನವರೇ ಆಗಿರುತ್ತಾರೆ ಎಂದು ಆರೋಪಿಸಿದರು.

ಕಲ್ಕತ್ತಾ ಹೈಕೋರ್ಟ್‌ ಗುರುವಾರ ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದಲ್ಲಿ ಕೊಲೆ ಮತ್ತು ಅತ್ಯಾಚಾರದಂತಹ ಘೋರ ಪ್ರಕರಣಗಳ ಕುರಿತು ಸಿಬಿಐ ತನಿಖೆ ಆದೇಶಿಸಿತು.

ADVERTISEMENT

ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠವು ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಎಲ್ಲಾ ಇತರ ಅಪರಾಧಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.