ನವದೆಹಲಿ: ಕೋವಿಡ್19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೊಳಗಳು ಮತ್ತು ನದಿ ತೀರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ‘ಛಠ್’ ಪೂಜಾ‘ ಸಂಭ್ರಮಾಚರಣೆ ನಿಷೇಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
‘ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛಠ್ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಅಧ್ಯಕ್ಷರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮಣಿಯಂ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ, ‘ಸಾರ್ವಜನಿಕ ಸಭೆಗಳಲ್ಲಿ ಸಭೆಗೆ ಅನುಮತಿ ನೀಡುವುದರಿಂದ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಆ ಕಾರಣಕ್ಕೆ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ‘ ಎಂದು ಹೇಳಿದೆ.
ಅತಿಥಿಗಳ ಸಂಖ್ಯೆ ಮಿತಿಗೆ ಒಪ್ಪಿಗೆ: ಇದೇ ವೇಳೆ, ವಿವಾಹ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ಆದೇಶ ಹೊರಡಿಸಲು ಕೋರಿ ದೆಹಲಿ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ಬುಧವಾರ ಅನುಮೋದನೆ ನೀಡಿದ್ದಾರೆ. ಹಿಂದೆ, 200ರಿಗೆ ಅವಕಾಶ ನೀಡಲಾಗಿತ್ತು. ಈಗ 50 ಜನರಿಗೆ ಮಾತ್ರ ವಿವಾಹಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸುವುದಕ್ಕಾಗಿ ಅರೆ ಸೇನಾಪಡೆಯಲ್ಲಿರುವ 45 ವೈದ್ಯರು, 160 ಅರೆ ವೈದ್ಯಕೀಯ ಸಿಬ್ಬಂದಿಯನ್ನು ಕೊರೊನಾ ಸೋಂಕಿತರ ನಿರ್ವಹಣೆಗಾಗಿ ನಿಯೋಜಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.