ಜೈಪುರ: ಕಪಿಲ್ ಸಿಬಲ್ ಅವರಿಗೆ ಕಾಂಗ್ರೆಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವ್ಯಂಗ್ಯವಾಡಿದ್ದಾರೆ.
ಸಿಬಲ್ ಅವರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಪ್ರಶ್ನಿಸಿದ ಬೆನ್ನಲ್ಲೇ ಗೆಹಲೋತ್ ಈ ಹೇಳಿಕೆ ನೀಡಿದ್ದಾರೆ.
ಅವರೊಬ್ಬ (ಸಿಬಲ್) ಅತ್ಯುತ್ತಮ ವಕೀಲ. ಆದರೆ ಕಾಂಗ್ರೆಸ್ ಸಂಸ್ಕೃತಿಯಲ್ಲಿ ಇತರ ಕಾರ್ಯಕರ್ತರಂತೆ ಅವರು ಪರಿಶ್ರಮ ಪಟ್ಟಿಲ್ಲ. ಕ್ರಮೇಣ ಅವರಿಗೆ ಅವಕಾಶ ಸಿಕ್ಕಿದ್ದಲ್ಲದೆ, ಸೋನಿಯಾ ಗಾಂಧಿ ಅವರ ಆಶೀರ್ವಾದ ಮತ್ತು ರಾಹುಲ್ ಗಾಂಧಿ ಬೆಂಬಲದೊಂದಿಗೆ ನೇರವಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದರು ಎಂದು ಗೆಹಲೋತ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
‘ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ನಂತರ ಕಾಂಗ್ರೆಸ್ ಪಕ್ಷವು ದೇಶಕ್ಕಾಗಿ ಅನೇಕ ತ್ಯಾಗಗಳನ್ನು ಮಾಡಿದೆ’ ಎಂದೂ ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರೂ ಪಕ್ಷದ ನಿರ್ಧಾರಗಳನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಿರುವ ಬಗ್ಗೆ ಕಪಿಲ್ ಸಿಬಲ್ ಆಕ್ರೋಶ ವ್ಯಕ್ತಪಡಿಸಿದ್ದರು.
ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಬಲ್, ಗಾಂಧಿ ಕುಟುಂಬ ಹಿಂದೆ ಸರಿದು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು. ಪಂಜಾಬ್ನಲ್ಲಿ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲು ರಾಹುಲ್ ಗಾಂಧಿ ಅವರಿಗೆ ಯಾವ ಅರ್ಹತೆಯಿತ್ತು ಎಂದು ಪ್ರಶ್ನಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.