ನವದೆಹಲಿ: ‘ಕೋವಿಡ್–19 ಪ್ರಕರಣಗಳ ಏರಿಕೆ ತಡೆಯಲು ಈಗ ಕೈಗೊಳ್ಳುತ್ತಿರುವ ಕ್ರಮಗಳನ್ನು ಮೊದಲೇ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಆರೋಗ್ಯ ಸಚಿವ ಹರ್ಷವರ್ಧನ್ ಅವರು ರಾಜೀನಾಮೆ ನೀಡಬೇಕು’ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಆಗ್ರಹಿಸಿದ್ದಾರೆ.
‘2020ರ ಏಪ್ರಿಲ್ನಲ್ಲಿ ಮತ್ತು 2020ರ ಅಕ್ಟೋಬರ್–ನವೆಂಬರ್ನಲ್ಲೇ ಸಂಸದೀಯ ಸಮಿತಿ ಹಾಗೂ ತಜ್ಞರು ಎಚ್ಚರಿಕೆ ನೀಡಿದ್ದರು. ಆದರೂ ಸರ್ಕಾರ ನಿನ್ನೆಯಿಂದ ಕೈಗೊಳ್ಳುತ್ತಿರುವ ಕ್ರಮಗಳನ್ನು ಮೊದಲೇ ಕೈಗೊಂಡಿಲ್ಲವೇಕೆ’ ಎಂದು ಅವರು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
‘ಇದು ನಿರ್ಲಕ್ಷ್ಯವಲ್ಲವೇ? ಇದಕ್ಕೆ ಯಾರೂ ಜವಾಬ್ದಾರರಲ್ಲವೇ? ಆರೋಗ್ಯ ಸಚಿವರು ಮತ್ತು ಕಾರ್ಯದರ್ಶಿಯವರನ್ನು ರಾಜೀನಾಮೆ ನೀಡುವಂತೆ ಕೇಳಬಾರದೇಕೆ?’ ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.
ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಜನ ಅಳುತ್ತಿದ್ದಾರೆ. ಸೋಂಕಿತರ ಪರೀಕ್ಷೆ ನಡೆಸುವಂತೆ ವೈದ್ಯರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಸೋಂಕಿತರನ್ನು ಕರೆತರುವಾಗ ಆಮ್ಲಜನಕದ ಸಿಲಿಂಡರ್ಗಳನ್ನು ತಮ್ಮ ಬೆನ್ನ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾರೆ. ಆಮ್ಲಜನಕ ಪೂರೈಸುವಂತೆ ಕೋರಿ ಆಸ್ಪತ್ರೆಗಳು ಹೈಕೋರ್ಟ್ ಮೊರೆಹೋಗುತ್ತಿವೆ ಎಂದೂ ಚಿದಂಬರಂ ಹೇಳಿದ್ದಾರೆ.
ಆರೋಗ್ಯ ಸಚಿವರೂ ಸೇರಿದಂತೆ ಆಡಳಿತದಲ್ಲಿರುವ ಯಾರಿಗೇ ಆದರೂ ಮನಃಸಾಕ್ಷಿ ಇದ್ದರೆ ಅವರು ರಾಜೀನಾಮೆ ನೀಡಬೇಕು ಎಂದು ಮತ್ತೊಂದು ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.