ADVERTISEMENT

ಕೇರಳದಲ್ಲಿ ಭಾರಿ ಮಳೆ, ಭೂಕುಸಿತ: 18 ಸಾವು, ಹಲವರು ನಾಪತ್ತೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 1:37 IST
Last Updated 17 ಅಕ್ಟೋಬರ್ 2021, 1:37 IST
ಕೋಟಯಂನಲ್ಲಿ ಪ್ರಯಾಣಿಕರಿದ್ದ ಬಸ್ಸೊಂದು ನೀರಿನಲ್ಲಿ ಭಾಗಶಃ ಮುಳುಗಿರುವುದು (ಪಿಟಿಐ ಚಿತ್ರ)
ಕೋಟಯಂನಲ್ಲಿ ಪ್ರಯಾಣಿಕರಿದ್ದ ಬಸ್ಸೊಂದು ನೀರಿನಲ್ಲಿ ಭಾಗಶಃ ಮುಳುಗಿರುವುದು (ಪಿಟಿಐ ಚಿತ್ರ)   

ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಸಂಭವಿಸಿದ ಪರಿಣಾಮ 18 ಜನರು ಮೃತಪಟ್ಟಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಈ ಸಂಬಂಧ ತುರ್ತು ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿರುವ ಅವರು, ʼರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗಿದೆ. ಜನರ ಜೀವ ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಿದ್ದೇವೆ. ಸೇನೆ, ವಾಯುಪಡೆ ಮತ್ತು ನೌಕಾದಳದ ನೆರವು ಕೋರಿದ್ದೇವೆ. ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದೆʼ ಎಂದು ತಿಳಿಸಿದ್ದಾರೆ.

ಪಟ್ಟಣಂತಿಟ್ಟ, ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಅತಿಹೆಚ್ಚು ಹಾನಿ ಸಂಭವಿಸಿದೆ. ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ರಕ್ಷಿಸುವಂತೆ ಹಾಗೂ ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದಾದ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಇಲಾಖೆಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ADVERTISEMENT

ಹಾಗೆಯೇ ಕೋವಿಡ್‌ ನಿಯಮಾವಳಿಗೆ ಅನುಸಾರವಾಗಿ ಪರಿಹಾರ ಶಿಬಿರಗಳನ್ನು ಆರಂಭಿಸುವಂತೆಯೂ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಟ್ಟಣಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಭಾರಿ ಮಳೆ ಸುರಿಯುತ್ತಿರುವ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡು, ಮಲಪ್ಪುರಂ, ಕೋಯಿಕೋಡ್‌ ಮತ್ತು ವಯನಾಡು ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.