ಚೆನ್ನೈ/ಪುದುಚೇರಿ: ತಮಿಳುನಾಡಿನ ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮತ್ತು ಆಂಧ್ರ ಪ್ರದೇಶದ ಪ್ರಸಿದ್ಧ ತೀರ್ಥಕ್ಷೇತ್ರ ತಿರುಪತಿಯಲ್ಲಿ ಗುರುವಾರ ರಾತ್ರಿ ಮತ್ತು ಶುಕ್ರವಾರ ಬೆಳಿಗ್ಗೆ ಭಾರಿ ಮಳೆ ಸುರಿದಿದೆ. ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಮಿಳುನಾಡು ಶಿಕ್ಷಣ ಸಚಿವ ಎ. ನಮಶಿವಾಯಂ ಅವರು ಅಧಿಕಾರಿಗಳ ಜತೆಗೆ ಚರ್ಚಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಂಡರು. ಶುಕ್ರವಾರ ಮತ್ತು ಶನಿವಾರವೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಚೆನ್ನೈ ಮತ್ತು ತಮಿಳುನಾಡಿನ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ತೂತ್ತುಕುಡಿ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಶುಕ್ರವಾರ ಸತತ ಎರಡನೇ ದಿನವೂ ಮಳೆ ಸುರಿದಿದೆ. ರಾಮನಾಥಪುರಂನಲ್ಲಿ ಭಾರಿ ಮಳೆಯಾಗಿದೆ. ಕಾಂಚಿಪುರಂ, ತಿರುವಳ್ಳೂರು, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ, ಕಾವೇರಿ ನದಿ ಕಣಿವೆ ಪ್ರದೇಶದಲ್ಲಿರುವ ಮದುರೆ, ತಿರುಚಿರಾಪಳ್ಳಿ, ವಿಲ್ಲುಪುರಂ ಜಿಲ್ಲೆಗಳಲ್ಲಿಯೂ ಶುಕ್ರವಾರ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.