ADVERTISEMENT

ಅರುಣಾಚಲದಲ್ಲಿ ಭಾರಿ ಮಳೆ, ಪ್ರವಾಹ; ಬೃಹತ್ ಪ್ರಮಾಣದ ಹಾನಿ

ಪಿಟಿಐ
Published 27 ಆಗಸ್ಟ್ 2021, 7:48 IST
Last Updated 27 ಆಗಸ್ಟ್ 2021, 7:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಇಟಾನಗರ (ಅರುಣಾಚಲ ಪ್ರದೇಶ): ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅರುಣಾಚಲ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೆಲವು ಕಡೆಗಳಲ್ಲಿ ರಸ್ತೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಸಿಯಾಂಗ್ ಜಿಲ್ಲೆಯಲ್ಲಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಪರಿಣಾಮವಾಗಿ ಬಿದಿರು ಮೆಳೆ ಸೇರಿದಂತೆ, ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ತೀವ್ರ ಹಾನಿಯುಂಟಾಗಿರುವ ವರದಿಯಾಗಿದೆ.

ಪ್ಯಾಂಗಿನ್-ಬೊಲೆಂಗ್ ಶಾಸಕ ಓಜಿಂಗ್ ಟಾಸಿಂಗ್ ಅವರು ಜಿಲ್ಲಾಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಜನರಿಗೆ ಅಗತ್ಯ ಸೇವೆ ಒದಗಿಸಲು, ಸಂಪರ್ಕ ಕಡಿತಗೊಂಡಿರುವ ರಸ್ತೆಗಳನ್ನು ಸರಿಪಡಿಸುವಂತೆ ಸೂಚಿಸಿದ್ದಾರೆ.

ADVERTISEMENT

ಸಿಯಾಂಗ್‌ ಜಿಲ್ಲೆಯ ಜಿಲ್ಲಾಧಿಕಾರಿ ಅತುಲ್ ಟಯೇಂಗ್ ಗುರುವಾರ ‘ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಂಪರ್ಕ ಮತ್ತು ಸಂವಹನ ವ್ಯವಸ್ಥೆ ಹಾಳಾಗಿದೆ. ಸಿಮಾಂಗ್ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರವಾಹ ಭೀತಿಯ ಹಿನ್ನೆಲೆಯಲ್ಲಿ ಜನರಲ್ ರಿಸರ್ವ್‌ ಎಂಜಿನಿಯರಿಂಗ್ ಫೋರ್ಸ್‌ (ಜಿಆರ್‌ಇಎಫ್‌) ಕಾರ್ಮಿಕರ ಶಿಬಿರಗಳಲ್ಲಿದ್ದ 550 ಮಂದಿಯನ್ನು ಬೊಲೆಂಗ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರು ಸ್ಥಳಾಂತರಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.