ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅಸ್ಪಷ್ಟವಾದ ಅರ್ಜಿ ಸಲ್ಲಿಸುವ ಮೂಲಕ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಹಾಗೂ ಸಾಕ್ಷಿಗಳನ್ನು ಹಾಜರುಪಡಿಸಬೇಕೆಂದು ಕೋರಿ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಅರ್ಜಿಯನ್ನು ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಲ್ಲಿಸಲಾಗಿಲ್ಲ. ಇದು ಸಂಪೂರ್ಣವಾಗಿ ಅಸ್ಪಷ್ಟವಾಗಿದೆ ಮತ್ತು ಇದರಿಂದ ಪ್ರಕರಣದ ವಿಚಾರಣೆ ವಿಳಂಬವಾಗಲಿದೆ ಈ ಕಾರಣಕ್ಕೆ ವಜಾಗೊಳಿಸಬೇಕು ಎಂದು ಆರೋಪಿಗಳ ಪರ ಹಾಜರಾದ ವಕೀಲರು, ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶ ಸಚಿನ್ ಗುಪ್ತಾ ಅವರಿಗೆ ಮನವಿ ಮಾಡಿದ್ದಾರೆ.
ಸ್ವಾಮಿ ಅವರು ಸಾಕ್ಷಿಗಳ ಪಟ್ಟಿ ಮತ್ತು ಇತರ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸೂಕ್ತ ನಿಂಬಂಧನೆಗಳ ಅಡಿಯಲ್ಲಿ ಸಲ್ಲಿಸಿಲ್ಲ ಎಂದೂ ಅವರು ಹೇಳಿದ್ದಾರೆ.
ಕಾನೂನಿನ ಪ್ರಕಾರ ಸಾಬೀತು ಪಡಿಸಬೇಕಾದ ದಾಖಲೆಗಳನ್ನು ಹಾಜರುಪಡಿಸಬೇಕೊ ಅಥವಾ ಸಾಕ್ಷಿಗಳನ್ನು ಹಾಜರುಪಡಿಸಬೇಕೊ ಎಂಬುದು ದೂರುದಾರ ಸಲ್ಲಿಸಿರುವ ಅರ್ಜಿಯಲ್ಲಿ ಸ್ಪಷ್ಟವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಈ ಕುರಿತ ಮುಂದಿನ ವಿಚಾರಣೆ ಜನವರಿ 12ರಂದು ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.