ನೈನಿತಾಲ್ (ಉತ್ತರಾಖಂಡ): ರಾಜ್ಯದ ಗಢವಾಲ್ ಮತ್ತು ಕುಮಾಂವ್ ಪ್ರದೇಶ ವ್ಯಾಪ್ತಿಯಲ್ಲಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫೈ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ರಾಜ್ಯ ವನ್ಯಜೀವಿ ಮಂಡಳಿಗೆ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ (ಪ್ರಭಾರ) ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಅಲೋಕ್ ಕುಮಾರ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರ ನೋಟಿಸ್ ಜಾರಿ ಮಾಡಿದ್ದು, ಪ್ರತಿವಾದಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲವಾಕಾಶ ನೀಡಿದೆ.
ಡೆಹ್ರಾಡೂನ್ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವನ್ನು ವಿಸ್ತರಿಸುವುದಕ್ಕಾಗಿ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು ಡಿನೋಟಿಫಿಕೇಷನ್ ಮಾಡಲು ಉತ್ತರಾಖಂಡ ರಾಜ್ಯ ವನ್ಯಜೀವಿ ಮಂಡಳಿ ನಿರ್ಧರಿಸಿರುವುದರ ವಿರುದ್ಧ ಸುಮಾರು 80 ಪರಿಸರ ಕಾರ್ಯಕರ್ತರು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಈ ಪತ್ರವನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಎಂದು ಪರಿಗಣಿಸಿದ ನ್ಯಾಯಾಲಯ, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು.
ಉತ್ತರಾಖಂಡ ರಾಜ್ಯದ ಕುಮಾವೂನ್ ಮತ್ತು ಗರ್ವಾಲ್ ಪ್ರದೇಶಗಳ 5,400 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿಕೊಂಡಿರುವ ಶಿವಾಲಿಕ್ ಆನೆ ಮೀಸಲು ಪ್ರದೇಶವನ್ನು 2002ರಲ್ಲಿ ಸರ್ಕಾರ ನೋಟಿಫೈ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.