ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಲಾಕ್ಡೌನ್ ಮುಗಿದ ನಂತರ ಖಾಸಗಿ ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳಿಂದ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕವನ್ನು ಸಂಗ್ರಹಿಸಲು ಅವಕಾಶ ನೀಡಿರುವ ಏಕ ಸದಸ್ಯ ಪೀಠದ ಆದೇಶವನ್ನು ತಡೆಹಿಡಿಯಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಈ ಕುರಿತು ಮೇ 31ರಂದು ನೀಡಿದ್ದ ಏಕ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿದೆಹಲಿ ಸರ್ಕಾರ, ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದವು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಅಮಿತ್ ಬನ್ಸಾಲ್ ಅವರ ರಜಾ ಪೀಠವು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು, 450 ಕ್ಕೂ ಹೆಚ್ಚು ಶಾಲೆಗಳನ್ನು ಪ್ರತಿನಿಧಿಸುವ ಅನುದಾನ ರಹಿತ ಶಾಲೆಗಳ ಕ್ರಿಯಾ ಸಮಿತಿಗೆ ನೋಟಿಸ್ ನೀಡಿದೆ. ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿಗಳನ್ನು ಜುಲೈ 10ರಂದು ನಡೆಯುವ ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಿದೆ.
ಮೇ 31ರಂದು ಏಕ ನ್ಯಾಯಾಧೀಶರ ಪೀಠ ನೀಡಿದ ತೀರ್ಪು ತಪ್ಪಾದ ಸಂಗತಿಗಳು ಮತ್ತು ಕಾನೂನನ್ನು ಆಧರಿಸಿದೆ ಎಂದು ದೆಹಲಿ ಸರ್ಕಾರ ಮತ್ತು ವಿದ್ಯಾರ್ಥಿಗಳು ವಾದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.