ನವದೆಹಲಿ: ಶಿಕ್ಷಣದ ಹಕ್ಕು ಕಾಯ್ದೆಯನ್ನು (ಆರ್ಟಿಇ) ಆರ್ಥಿಕವಾಗಿ ಹಿಂದುಳಿದ 14 ವರ್ಷದ ಮೇಲ್ಪಟ್ಟವರಿಗೂ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ದೆಹಲಿ ಹೈಕೋರ್ಟ್ ಬುಧವಾರ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿದೆ.
2019ರಲ್ಲೇ ನ್ಯಾಯಾಲಯ ಆದೇಶ ನೀಡಿದ್ದರೂ ಆರ್ಟಿಇ ಕಾಯ್ದೆಯನ್ನು ಈಗಿರುವ 8ನೇ ತರಗತಿಯಿಂದ 12ನೇ ತರಗತಿಯವರೆಗೂ ಏಕೆ ವಿಸ್ತರಿಸಿಲ್ಲ ಎಂದು ನ್ಯಾಯಮೂರ್ತಿ ನಜ್ಮಿ ವಾಝಿರಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
ಈ ವಿಷಯದ ಬಗ್ಗೆ ಸರ್ಕಾರೇತರ ಸಂಸ್ಥೆ ‘ಸೊಷಿಯಲ್ ಜ್ಯೂರಿಸ್ಟ್’ ಅರ್ಜಿ ಸಲ್ಲಿಸಿತ್ತು.
ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ದೇಶದಾದ್ಯಂತ ಖಾಸಗಿ ಶಾಲೆಗಳು 8ನೇ ತರಗತಿ ಉತ್ತೀರ್ಣರಾದ ಸಾವಿರಾರು ವಿದ್ಯಾರ್ಥಿಗಳನ್ನು ಹೊರಗೆ ಹಾಕುತ್ತಿವೆ ಎಂದು ಸರ್ಕಾರೇತರ ಸಂಸ್ಥೆ ಪರ ವಕೀಲರಾದ ಅಶೋಕ್ ಅಗರವಾಲ್ ಮತ್ತು ಕುಮಾರ್ ಉತ್ಕರ್ಷ ವಾದ ಮಂಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.