ADVERTISEMENT

ಹಿಜಾಬ್‌: ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ಐಎಎನ್ಎಸ್
Published 15 ಮಾರ್ಚ್ 2022, 10:34 IST
Last Updated 15 ಮಾರ್ಚ್ 2022, 10:34 IST
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ: ಪಿಟಿಐ ಚಿತ್ರ
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ: ಪಿಟಿಐ ಚಿತ್ರ   

ನವದೆಹಲಿ: ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸ್ವಾಗತಿಸಿದ್ದಾರೆ. ತರಗತಿಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಜಾರಿ ಮಾಡಿರುವ ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿಯರು ಪಾಲಿಸಬೇಕು ಎಂದಿದ್ದಾರೆ.

‘ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ತಮ್ಮ ಇಚ್ಛೆಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವ ಹಕ್ಕಿದೆ. ಅವರ ಸ್ವಾತಂತ್ರ್ಯಕ್ಕೆ ಯಾವುದೇ ಧಕ್ಕೆ ಇಲ್ಲ. ಆದರೆ, ತರಗತಿಗಳಲ್ಲಿ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗಳು ಜಾರಿಗೊಳಿಸಿರುವ ವಸ್ತ್ರ ಸಂಹಿತೆಯನ್ನು ಅನುಸರಿಸಬೇಕು’ ಎಂದಿದ್ದಾರೆ.

ಹಿಜಾಬ್ ವಿವಾದದ ಕುರಿತಂತೆ ಇಂದು(ಮಾರ್ಚ್ 15) ಬೆಳಗ್ಗೆ ತೀರ್ಪು ಪ್ರಕಟಿಸಿದ ಹೈಕೋರ್ಟ್, ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.

ADVERTISEMENT

‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ (ಇಆರ್‌ಪಿ) ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಹೈಕೋರ್ಟ್ ತೀರ್ಪು, ಸದ್ಯ ನಡೆಯುತ್ತಿರುವ ಹಿಜಾಬ್ ವಿವಾದಗಳಿಗೆ ತೆರೆ ಎಳೆಯಲಿದೆ ಮತ್ತು ಹೆಣ್ಣುಮಕ್ಕಳು ಶಿಕ್ಷಣ ಮುಂದುವರಿಸಲು ಅನುವು ಮಾಡಿಕೊಡಲಿದೆ‘ ಎಂದು ನಂಬುತ್ತೇನೆ ಎಂದು ರೇಖಾ ಶರ್ಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.