ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಖಾಸಗಿ ಬಸ್ ಮೇಲೆ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 15 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಕೆಲವು ಮಂದಿ ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಸಂಜೆ 6.40ರ ಸುಮಾರಿಗೆ ಬರ್ಥಿನ್ ಬಳಿಯ ಭಾಲುಘಾಟ್ ಪ್ರದೇಶದಲ್ಲಿ ಪರ್ವತದ ದೊಡ್ಡ ಭಾಗವು ಕುಸಿದು ಸುಮಾರು 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಬಸ್ ಮರೋಟನ್ನಿಂದ ಘುಮಾರ್ವಿನ್ಗೆ ತೆರಳುತ್ತಿತ್ತು ಎಂದು ಅವರು ಹೇಳಿದ್ದಾರೆ.
ಇಲ್ಲಿಯವರೆಗೆ ಹದಿನೈದು ಶವಗಳನ್ನು ಹೊರತೆಗೆಯಲಾಗಿದೆ. ಒಂದು ಮಗು ಸೇರಿದಂತೆ ಕೆಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರು ಬದುಕುಳಿದಿರುವ ಭರವಸೆ ಕ್ಷೀಣಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ನಕ್ಷ್, ಆರವ್, ಸಂಜೀವ್, ವಿಮ್ಲಾ, ಕಮಲೇಶ್, ಕಾಂತಾ ದೇವಿ, ಅಂಜನಾ, ಬಕ್ಷಿ ರಾಮ್, ನರೇಂದ್ರ ಶರ್ಮಾ, ಕ್ರಿಶನ್ ಲಾಲ್, ಚುನಿ ಲಾಲ್, ರಜನೀಶ್, ಸೋನು, ಷರೀಫ್ ಖಾನ್ ಮತ್ತು ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಾಳುಗಳು ಬಿಲಾಸ್ಪುರದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುಲ್ಲು ದಸರಾದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ತಡರಾತ್ರಿ ಕುಲ್ಲುವಿನಿಂದ ಬಿಲಾಸ್ಪುರಕ್ಕೆ ತಲುಪಿ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು.
ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಮಳೆಯ ನಂತರ ಪರ್ವತ ಕುಸಿದು ಈ ಅಪಘಾತ ಸಂಭವಿಸಿರುವುದು ಸ್ಪಷ್ಟವಾಗಿದೆ. ಆದರೆ, ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಹಿಮಾಚಲವು ಗುಡ್ಡಗಾಡು ರಾಜ್ಯವಾಗಿದ್ದು, ದೊಡ್ಡ ರಸ್ತೆಗಳು, ಸೇತುವೆಗಳು ಮತ್ತು ಸುರಂಗಗಳ ನಿರ್ಮಾಣ ನಡೆಯುತ್ತಿದೆ. ಪ್ರಸ್ತುತ ಅಭಿವೃದ್ಧಿ ಮಾದರಿ ಸುಸ್ಥಿರವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.