ADVERTISEMENT

ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಬಿಜೆಪಿ ಎದುರಿಸಲು ಸಾಧ್ಯವಿಲ್ಲ: ಹಿಮಂತ ಬಿಸ್ವಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜೂನ್ 2021, 3:26 IST
Last Updated 13 ಜೂನ್ 2021, 3:26 IST
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ   

ದಿಸ್ಪುರ್‌: ಬಿಜೆಪಿ ವಿರುದ್ಧ ಪ್ರಾದೇಶಿಕ ಪಕ್ಷಗಳ ಒಗ್ಗಟ್ಟು ಸಾಧ್ಯವಿಲ್ಲ. ರಾಷ್ಟ್ರದ ಪ್ರತಿಯೊಂದು ರಾಜ್ಯಗಳು ಪರಸ್ಪರ ಸ್ಪರ್ಧೆ ಮಾಡುವುದರಿಂದ ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಪ್ರಬಲ ಎದುರಾಳಿಯಾಗಲು ಆಗುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆಯಾ ರಾಜ್ಯಗಳಲ್ಲಿ ನಾಯಕರು ಹುಟ್ಟಿಕೊಳ್ಳುತ್ತಾರೆ ಆದರೆ ಸಂಪೂರ್ಣ ರಾಷ್ಟ್ರದ ವಿಚಾರಕ್ಕೆ ಬಂದಾಗ ಜನರು ರಾಷ್ಟ್ರದ ಸಾರ್ವಭೌಮತ್ವವನ್ನು ಕಾಪಾಡಲು ಶಕ್ತವಾದ ಪಕ್ಷಕ್ಕೆ ಮತ ಹಾಕುತ್ತಾರೆ ಎಂದು 'ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌' ನಡೆಸಿದ ಸಂದರ್ಶನದಲ್ಲಿ ಹಿಮಂತ ಬಿಸ್ವಾ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಎಡ ಪ್ರಗತಿಪರ ಚಿಂತಕರು ಕಾಂಗ್ರೆಸ್‌ ಅನ್ನು ಸಂಪೂರ್ಣವಾಗಿ ಬದಿಗೆ ಸರಿಸಿ ಬರೆಯುತ್ತಿರುವುದನ್ನು ನೋಡಿದಾಗ ಒಬ್ಬ ರಾಜಕೀಯ ಮುಖಂಡನಾಗಿ ಖುಷಿಯಾಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್‌ ಪ್ರಮುಖ ಸ್ಪರ್ಧಿಯೇ ಅಲ್ಲ. ಪ್ರಾದೇಶಿಕ ಪಕ್ಷಗಳೇ ಪ್ರಾಮುಖ್ಯತೆ ವಹಿಸುತ್ತಿವೆ ಎಂದು ಪ್ರಗತಿಪರರು ಉಲ್ಲೇಖಿಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಕ್ಕಿರುವ ಬಹುದೊಡ್ಡ ಜಯ ಎಂದು ಬಿಸ್ವಾ ಹೇಳಿದ್ದಾರೆ.

ADVERTISEMENT

ಕಾಂಗ್ರೆಸ್‌ ಮುಕ್ತ ಭಾರತ ವಾಸ್ತವದಲ್ಲಿ ನಿಜವಾಗಿದೆ. ಜನರು ಪ್ರಾದೇಶಿಕ ಪಕ್ಷಗಳು ಒಟ್ಟಾಗುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ರಾಷ್ಟ್ರಮಟ್ಟದಲ್ಲಿ ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಬಿಜೆಪಿ ಎದುರಾಳಿಯಾಗಿ ನಿಲ್ಲಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಗಳು ಪರಸ್ಪರ ಸ್ಪರ್ಧಿಸುತ್ತವೆ. ಪಶ್ಚಿಮ ಬಂಗಾಳ ಮತ್ತು ಬಿಹಾರ ಒಟ್ಟಾಗಿ ಬರಲು ಸಾಧ್ಯವೇ ಇಲ್ಲ. ಹಾಗೆಯೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳು ಒಂದಾಗಲು ಸಾಧ್ಯವಿಲ್ಲ. ಒಂದು ವೇಳೆ ಒಗ್ಗಟ್ಟು ಸಾಧ್ಯವಾದರೂ ಒಳಜಗಳಗಳು, ಅಧಿಕಾರಕ್ಕಾಗಿ ಕಿತ್ತಾಟಗಳು ಪ್ರಾದೇಶಿಕ ಪಕ್ಷಗಳ ಒಗ್ಗಟ್ಟನ್ನು ದುರ್ಬಲಗೊಳಿಸುತ್ತವೆ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲ ಒಗ್ಗಟ್ಟಾಗಿ ಬಂದರೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಪ್ರತಿಸ್ಪರ್ಧಿಯಾಗಲು ಸಾಧ್ಯವಿಲ್ಲ ಎಂಬ ವಿಶ್ವಾಸವನ್ನು ಬಿಸ್ವಾ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕ ಪಕ್ಷಗಳಲ್ಲಿ ನಾಯಕರು ಹುಟ್ಟಿಕೊಳ್ಳುವುದು ಸಹಜ. ಆದರೆ ಬಹುದೊಡ್ಡ ರಾಷ್ಟ್ರದ ನಾಯಕತ್ವದ ವಿಚಾರಕ್ಕೆ ಬಂದಾಗ ಜನರು ರಾಷ್ಟ್ರದ ಸಾರ್ವಭೌಮತ್ವವನ್ನು ಕಾಪಾಡಲು ಶಕ್ತವಿರುವ ಪಕ್ಷವನ್ನೇ ಆಯ್ಕೆ ಮಾಡುತ್ತಾರೆ. ಜನರು ರಾಷ್ಟ್ರದ ಭದ್ರತೆ ಮತ್ತು ಆಂತರಿಕ ಕ್ಷೇಮವನ್ನು ಬಯಸುತ್ತಾರೆ ಎಂದು ಬಿಸ್ವಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.