ಸಿಂಧ್: ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ವ್ಯಕ್ತಿಯೊಬ್ಬ ಹಿಂದು ದೇಗುಲ ಧ್ವಂಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಬದಿನ್ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.
ಬದಿನ್ ಜಿಲ್ಲೆಯ ತಾತ್ಕಾಲಿಕ ದೇವಾಲಯದಲ್ಲಿ ಇರಿಸಲಾಗಿದ್ದ ವಿಗ್ರಹಗಳನ್ನು ಮುಹಮ್ಮದ್ ಇಸ್ಮಾಯಿಲ್ ಎಂಬಾತ ಭಗ್ನಗೊಳಿಸಿ ಪರಾರಿಯಾಗಿದ್ದಾನೆ ಎಂದು ಅಶೋಕ್ ಕುಮಾರ್ ಎಂಬುವವರು ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬದಿನ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
‘ಇಸ್ಮಾಯಿಲ್ ಮಾನಸಿಕವಾಗಿ ಸ್ಥಿರವಾಗಿದ್ದಾನೆಯೇ, ಮೂರ್ತಿಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಿದ್ದಾನೆಯೇ ಎಂಬುದನ್ನು ನಾವು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ,’ ಎಂದು ಅಧಿಕಾರಿ ಹೇಳಿದರು.
ಈ ಮಧ್ಯೆ, ಬಾದಿನ್ ಪೊಲೀಸ್ ವರಿಷ್ಠಾಧಿಕಾರಿ ಶಬೀರ್ ಸೇಥರ್ 24 ಗಂಟೆಗಳ ಒಳಗೆ ತನಿಖಾ ವರದಿ ನೀಡಲು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಹಿಂದುಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ.
ಅಧಿಕೃತ ಅಂಕಿ ಅಂಶಗಳ ಪ್ರಕಾರ, 75 ಲಕ್ಷ ಹಿಂದುಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ, ಈ ಪೈಕಿ ಬಹುತೇಕರು ಸಿಂಧ್ ಪ್ರಾಂತ್ಯದಕ್ಕೇ ನೆಲೆಸಿದ್ದಾರೆ.
ಸಿಂಧ್ನ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದಂಥ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.