ಅಮಿತ್ ಶಾ
(ಪಿಟಿಐ ಚಿತ್ರ)
ನವದೆಹಲಿ: ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಭಯೋತ್ಪಾದಕರ ಹಲವು ಕೃತ್ಯಗಳಿಗೆ ಸಾಕ್ಷಿಯಾದ ಜಮ್ಮು ಹಾಗೂ ಕಾಶ್ಮೀರದಲ್ಲಿನ ಭದ್ರತೆಯ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು.
ಇದಕ್ಕೆ ಸಂಬಂಧಿಸಿದಂತೆ ಜೂನ್ 16ರಂದು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಭಾಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಹಾಗೂ ಸಿಆರ್ಪಿಎಫ್ನ ಉನ್ನತಮಟ್ಟ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಭಯೋತ್ಪಾದಕರ ದಾಳಿಯ ನಂತರದಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳು ಶಾ ಅವರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ರಯೀಸ್, ಕಥುವಾ ಹಾಗೂ ದೊಡಾ ಜಿಲ್ಲೆಯಲ್ಲಿ ಭಯೋತ್ಪಾದಕ ಕೃತ್ಯಗಳು ಕಳೆದ ಕೆಲ ದಿನಗಳಲ್ಲಿ ನಡೆದಿವೆ. ಇದರಲ್ಲಿ ಒಂಭತ್ತು ಯಾತ್ರಿಗಳು ಮೃತಪಟ್ಟು, ಒಬ್ಬರು ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಏಳು ಭದ್ರತಾ ಸಿಬ್ಬಂದಿ ಒಳಗೊಂಡು ಹಲವರು ಗಾಯಗೊಂಡಿದ್ದಾರೆ.
ಭದ್ರತಾ ಸಿಬ್ಬಂದಿಯ ಪ್ರತಿ ದಾಳಿಯಲ್ಲಿ ಪಾಕಿಸ್ತಾನದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸಂಗ್ರಹಿಸಿಡಲಾಗಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.