ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದ್ಯೋಪಾಧ್ಯಾಯ ಅವರಿಗೆ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಗೃಹ ಸಚಿವಾಲಯ ನೋಟಿಸ್ ನೀಡಿದೆ.
‘ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51-ಬಿ ಉಲ್ಲಂಘಿಸಿ ಕೇಂದ್ರ ಸರ್ಕಾರದ ಕಾನೂನುಬದ್ಧ ನಿರ್ದೇಶನವನ್ನು ಅನುಸರಿಸಲು ನಿರಾಕರಿಸಿದ್ದಕ್ಕಾಗಿ ಆಲಾಪನ್ ಬಂದ್ಯೋಪಾಧ್ಯಾಯ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೋಟಿಸ್ ಕುರಿತು ಮೂರು ದಿನದ ಒಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.
ಪೂರ್ವನಿಗದಿಯಂತೆ ಆಲಾಪನ್ ಅವರು ಮೇ 31ರ ಸೋಮವಾರ ನಿವೃತ್ತರಾಗಬೇಕಿತ್ತು. ಕೋವಿಡ್ ತುರ್ತು ಪರಿಸ್ಥಿತಿ ಇರುವ ಕಾರಣ, ಅವರ ಸೇವೆಯನ್ನು ಮೂರು ತಿಂಗಳು ವಿಸ್ತರಿಸಿ ಮೇ 24ರಂದು ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಮೇ 28ರಂದು ಕೇಂದ್ರ ಸರ್ಕಾರವು ಹೊರಡಿಸಿದ್ದ ಆದೇಶದ ಪ್ರಕಾರ ಆಲಾಪನ್ ಅವರು ಸೋಮವಾರ ಕೇಂದ್ರದ ಸೇವೆಗೆ ಹಾಜರಾಗಬೇಕಿತ್ತು. ಆದರೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಬಿಡುಗಡೆ ಮಾಡದ ಕಾರಣ ಅವರು, ಕೇಂದ್ರ ಸೇವೆಗೆ ಹಾಜರಾಗಿಲ್ಲ.
ಆಲಾಪನ್ ಬಂದ್ಯೋಪಾಧ್ಯಾಯಗೆ ಅವರು ನಿವೃತ್ತರಾಗಿದ್ದಾರೆ ಎಂದು ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 (ಬಿ) ಪ್ರಕಾರ, ‘ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ, ರಾಜ್ಯ ಕಾರ್ಯಕಾರಿ ಸಮಿತಿ, ಜಿಲ್ಲಾ ಪ್ರಾಧಿಕಾರದ ಪರವಾಗಿ ನೀಡಿದ ಯಾವುದೇ ನಿರ್ದೇಶನ ಅನುಸರಿಸಲು ನಿರಾಕರಿಸುವವರನ್ನು ಅಪರಾಧಿ’ ಎಂದು ಪರಿಗಣಿಸಲಾಗುತ್ತದೆ. ಒಂದು ಅಥವಾ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ.
ಕೋವಿಡ್ ಲಾಕ್ಡೌನ್ ಕ್ರಮಗಳನ್ನು ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೆ ತರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.