ಶಿಮ್ಲಾ: ವಿಧಾನಸಭೆಯಲ್ಲಿ ಮಾಸ್ಕ್ ಧರಿಸದ ಕಾರಣಕ್ಕೆ ಮುಖ್ಯಮಂತ್ರಿ ಜೈರಾಂ ಠಾಕೂರ್ ಅವರಿಗೆ ₹5,000 ದಂಡ ವಿಧಿಸುವಂತೆ ಹಿಮಾಚಲ ಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರು ಸ್ಪೀಕರ್ ವಿಪಿನ್ ಪರ್ಮಾರ್ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ.
ಕೋವಿಡ್ ಹರಡುವುದನ್ನು ತಡಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ಸಂದೇಶ ಈ ಸದನದ ಮೂಲಕ ಸಾರ್ವಜನಿಕರಿಗೆ ಹೋಗಬೇಕು ಎಂದು ಬಜೆಟ್ ಅಧಿವೇಶನದ ಕೊನೆಯ ದಿನವಾದ ಶನಿವಾರ ಶಿಲ್ಲೈ ಶಾಸಕ ಹರ್ಷವರ್ಧನ್ ಚವ್ಹಾಣ್ ಹೇಳಿದ್ದಾರೆ.
ಹರ್ಷವರ್ಧನ್ ಚವ್ಹಾಣ್, ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿದಾಗ ಸಭಾಪತಿ ಪೀಕರ್ ವಿಪಿನ್ ಪರ್ಮಾರ್ ಅವರು ಕೂಡ ಮಾಸ್ಕ್ ಧರಿಸಿರಲಿಲ್ಲ.
ಈ ಹಿಂದೆ ಉನಾ ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ₹5,000 ದಂಡವನ್ನು ವಸೂಲಿ ಮಾಡಲಾಗಿತ್ತು. ಇಷ್ಟೊಂದು ಮೊತ್ತದ ದಂಡ ಸಂಗ್ರಹವನ್ನು ಸಮರ್ಥಿಸಲು ಸಾಧ್ಯವಿಲ್ಲ. ದಂಡದ ಮೊತ್ತವನ್ನು ಕಡಿಮೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಮುಖೇಶ್ ಅಗ್ನಿಹೋತ್ರಿ ಆಗ್ರಹಿಸಿದರು.
ಅದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಜೈರಾಂ ಠಾಕೂರ್, ‘ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.