ನವದೆಹಲಿ: ‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಕೆಲ ಸಂಸ್ಥೆಗಳು ಸಾಧಿಸಿರುವ ಯಶಸ್ಸಿನಿಂದಾಗಿ ಕೆಲವು ತೊಂದರೆ ಅನುಭವಿಸುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ಈ ವ್ಯವಸ್ಥೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
‘ಇಂಡಿಯಾ ಟುಡೆ ಕಾಂಕ್ಲೇವ್’ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
‘ದೇಶವು ವಿಶ್ವಾಸ ಹಾಗೂ ದೃಢಸಂಕಲ್ಪದಿಂದ ಮುನ್ನಡೆಯುತ್ತಿದೆ. ವಿಶ್ವದ ವಿವಿಧ ಕ್ಷೇತ್ರಗಳ ತಜ್ಞರು ಭಾರತದ ಭವಿಷ್ಯದ ಬಗ್ಗೆ ಆಶಾವಾದದಿಂದ ಇರುವಾಗ ದೇಶದ ಬಗ್ಗೆ ಕೀಳಾಗಿ ಮಾತನಾಡುವುದು, ನಿರಾಶೆಯ ಮಾತುಗಳನ್ನಾಡುವ ಮೂಲಕ ರಾಷ್ಟ್ರದ ನೈತಿಕಸ್ಥೈರ್ಯ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಮೋದಿ ಹೇಳಿದರು.
‘ಯಾವುದಾದರೂ ಮಂಗಳಕರ ಕಾರ್ಯ ನಡೆಯುತ್ತಿರುವಾಗ ದೃಷ್ಟಿ ಬೊಟ್ಟು ಇಡುವ ಸಂಪ್ರದಾಯ ನಮ್ಮಲ್ಲಿದೆ. ದೇಶದಲ್ಲಿ ಹಲವಾರು ಉತ್ತಮ ಕೆಲಸಗಳು ನಡೆಯುತ್ತಿರುವಾಗ ಕೆಲವರು ದೃಷ್ಟಿ ಬೊಟ್ಟು ಇಡುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ’ ಎಂದು ಅವರು ಕುಟುಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.