ADVERTISEMENT

ಪಶ್ಚಿಮ ಬಂಗಾಳದ ಐ–ಪ್ಯಾಕ್‌ ಕಚೇರಿ ಮೇಲೆ ದಾಳಿ: ವಿಚಾರಣೆ ಮುಂದೂಡಿದ ಸುಪ್ರೀಂ

ಪಿಟಿಐ
Published 3 ಫೆಬ್ರುವರಿ 2026, 14:50 IST
Last Updated 3 ಫೆಬ್ರುವರಿ 2026, 14:50 IST
   

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಸಲಹಾ ಸಂಸ್ಥೆ ಐ–ಪ್ಯಾಕ್‌ನ ಕಚೇರಿಯಲ್ಲಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಫೆಬ್ರುವರಿ 10ಕ್ಕೆ ಮುಂದೂಡಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್ ಸಲ್ಲಿಸಿ, ಸಮಯ ಕೋರಿದೆ ಎಂದು ಇ.ಡಿ ಪರ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್ ಮಿಶ್ರಾ ಹಾಗೂ ಎನ್‌.ವಿ.ಅಂಜಾರಿಯಾ ಅವರಿದ್ದ ನ್ಯಾಯಪೀಠಕ್ಕೆ ಮಂಗಳವಾರ ತಿಳಿಸಿದರು. ಬಳಿಕ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.

ಜನವರಿ 8ರಂದು ಐ–ಪ್ಯಾಕ್‌ನ ಕಚೇರಿ ಹಾಗೂ ಸಂಸ್ಥೆಯ ನಿರ್ದೇಶಕ ಪ್ರತೀಕ್‌ ಜೈನ್‌ ಅವರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ ಅವರು ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಅಲ್ಲಿದ್ದ ‍ಪ್ರಮುಖ ದಾಖಲೆಗಳನ್ನು ಕೊಂಡೊಯ್ದಿದ್ದಾರೆ ಎಂದು ಇ.ಡಿ ಆರೋಪಿಸಿದೆ.

ADVERTISEMENT

‘ಇ.ಡಿ ಯಾವುದೇ ಪ್ರಾಮಾಣಿಕ ತನಿಖೆಗಾಗಿ ಶೋಧ ನಡೆಸುತ್ತಿರಲಿಲ್ಲ. ಬದಲಿಗೆ ಟಿಎಂಸಿಯ ಚುನಾವಣಾ ಕಾರ್ಯತಂತ್ರವನ್ನು ತಿಳಿದು, ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವುದಕ್ಕಾಗಿ ಈ ಕಾರ್ಯಾಚರಣೆ ನಡೆಸಿತ್ತು’ ಎಂದು ಟಿಎಂಸಿ ಕೂಡ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.