ADVERTISEMENT

ಪ್ರಿಯಾಂಕಾ ಬಿಡುಗಡೆಗೆ ಗಡುವು ಕೊಟ್ಟ ಸಿಧು: ಪಾದಯಾತ್ರೆ ಕೈಗೊಳ್ಳುವ ಎಚ್ಚರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2021, 12:23 IST
Last Updated 5 ಅಕ್ಟೋಬರ್ 2021, 12:23 IST
ನವಜೋತ್‌ ಸಿಂಗ್‌ ಸಿಧು
ನವಜೋತ್‌ ಸಿಂಗ್‌ ಸಿಧು    

ಚಂಢೀಗಡ: ಪಂಜಾಬ್‌ನಿಂದ– ಲಖಿಂಪುರಕ್ಕೆ ಪಾದಯಾತ್ರೆ ನಡೆಸುವ ಎಚ್ಚರಿಕೆಯನ್ನು ಪಂಜಾಬ್‌ ಕಾಂಗ್ರೆಸ್‌ನ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ನೀಡಿದ್ದಾರೆ.

'ಲಖಿಂಪುರ ಖೇರಿ ಹತ್ಯಾಕಾಂಡದ ಆರೋಪಿ, ಕೇಂದ್ರ ಸಚಿವರ ಮಗನನನ್ನು ನಾಳೆಯೊಳಗೆ ಬಂಧಿಸದೇ ಹೋದರೆ, ರೈತರಿಗಾಗಿ ಹೋರಾಟ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಅವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡದೇ ಹೋದರೆ, ನಾಳೆ (ಬುಧವಾರ) ಪಂಜಾಬ್‌ ಕಾಂಗ್ರೆಸ್‌ ಲಖಿಂಪುರದ ಕಡೆಗೆ ಹೆಜ್ಜೆ ಹಾಕಲಿದೆ,' ಎಂದು ಸಿಧು ಟ್ವೀಟ್‌ ಮಾಡಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಖಿಂಪುರದಲ್ಲಿ ಹಿಂಸಾಚಾರ ಸಂಭವಿಸಿ ನಾಲ್ವರು ರೈತರು ಸೇರಿ 8 ಮಂದಿ ಮೃತಪಟ್ಟಿದ್ದರು.

ADVERTISEMENT

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿದಿತ್ತು. ಇದರಿಂದ ನಾಲ್ವರು ರೈತರು ಬಲಿಯಾಗಿದ್ದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, ಅವುಗಳಿಗೆ ಬೆಂಕಿ ಹಚ್ಚಿದ್ದರು. ಈ ಎಸ್‌ಯುವಿಗಳಲ್ಲಿ ಇದ್ದವರಲ್ಲಿ ನಾಲ್ವರು ಮೃತಪಟ್ಟಿದ್ದರು.

ರೈತರು ದುರ್ಮರಣಕ್ಕೀಡಾದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಲಖಿಂಪುರ ಖೇರಿಗೆ ಭೇಟಿ ನೀಡಲು ಸೋಮವಾರ ಪ್ರಯಾಣ ಆರಂಭಿಸಿದ್ದರು. ಆದರೆ, ಅವರನ್ನು ಸೀತಾಪುರ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಶಾಂತಿ ಕದಡಿದ ಆರೋಪದ ಮೇಲೆ ಅವರನ್ನು ಇಂದು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.