ಹೈದರಾಬಾದ್: ‘ಡ್ರಗ್ಸ್ ಮಾಫಿಯಾ ಹಾಗೂ ಫ್ಯಾಸಿಸ್ಟ್ ಶಕ್ತಿಗಳಿಂದ ರಾಜ್ಯದ ಜನತೆಯನ್ನು ರಕ್ಷಿಸಲು ಕೂಡಲೇ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು’ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿದರು.
ಇಲ್ಲಿನ ಮಂಗಳಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ 36 ಗಂಟೆಗಳ ನಿರಶನ ಸತ್ಯಾಗ್ರಹ ಆರಂಭಿಸಿದ ನಂತರ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಪಕ್ಷದ ಕಚೇರಿಯನ್ನು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಧ್ವಂಸಗೊಳಿಸಿದರು ಎನ್ನಲಾಗಿದೆ. ಇದನ್ನು ಖಂಡಿಸಿ ಅವರು ಸತ್ಯಾಗ್ರಹ ಆರಂಭಿಸಿದ್ದಾರೆ.
‘ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ’ ಎಂದು ಆರೋಪಿಸಿದರು. ‘ಡ್ರಗ್ಸ್ ಜಾಲ ಕೇವಲ ಆಂಧ್ರಪ್ರದೇಶಕ್ಕೆ ಸೀಮಿತವಾಗಿಲ್ಲ. ನೆರೆಯ ರಾಜ್ಯಗಳಾದ ತೆಲಂಗಾಣ, ಕರ್ನಾಟಕ, ತಮಿಳುನಾಡು ಅಲ್ಲದೇ, ಉತ್ತರಪ್ರದೇಶ, ಮಹಾರಾಷ್ಟ್ರಕ್ಕೂ ಹಬ್ಬಿದೆ. ಈ ಸಾಮಾಜಿಕ ಅನಿಷ್ಟದಿಂದ ರಾಜ್ಯದ ಯುವ ಜನತೆಯನ್ನು ರಕ್ಷಿಸಬೇಕು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.